ಬಾಯಲ್ಲಿ ನಾವೆಲ್ಲ ಒಂದು, ನಾವೆಲ್ಲ ಹಿಂದೂ ಎನ್ನುವ ಮಂತ್ರ, ಅಂತರಂಗದಲ್ಲಿ ಜಾತಿಗಳನ್ನು ಒಡೆದು ಆಳುವ ಕುತಂತ್ರ. ಮಂಡಲ ವಿರುದ್ದ ಕಮಂಡಲ ಹಿಡಿದ ಬಿಜೆಪಿ ನಾಯಕರ ಜಾತಿ ಹಿಪಾಕ್ರಸಿಯನ್ನು ಬಿಚ್ಚಿಟ್ಟರೆ ಅದೊಂದು ಕೊನೆಯಿಲ್ಲದ ಧಾರವಾಹಿ ಆದೀತು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕುರುಬ ಸಮಾವೇಶ ನಡೆಸಿದ್ದ ಈಶ್ವರಪ್ಪ, ಪಂಚಮಸಾಲಿ ಲಿಂಗಾಯತರ ಸಮಾವೇಶ ನಡೆಸಿದ ಯತ್ನಾಳ್, ಬ್ರಾಹ್ಮಣ ಸಮಾವೇಸದಲ್ಲಿ ಪಾಲ್ಗೊಂಡಿದ್ದ ಜೋಷಿ, ಕಾಗೇರಿ, ಸುರೇಶ್ ಕುಮಾರ್, ಒಕ್ಕಲಿಗನೆಂಬ ಕಾರಣಕ್ಕೆ ಸಚಿವನಾದೆ ಎನ್ನುವ ಆರ್. ಅಶೋಕ್ ಜಾತಿವಾದಿಗಳಾ? ಜಾತ್ಯತೀತರಾ? ಎಂದು ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಾತಿವಾದಿಯೇ? ಜಾತ್ಯತೀವಾದಿಯೇ? ಜಾತಿ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ ಎಂದು ಬಿಜೆಪಿ ನಾಯಕರು ಪ್ರಮಾಣ ಮಾಡಲಿ, ನಾನು ರಾಜಕೀಯದಿಮದ ನಿವೃತ್ತಿ ಆಗುತ್ತೇನೆ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಆತ್ಮವಂಚನೆ ಬಿಟ್ಟು ಪ್ರಾಮಾಣಿಕ ರಾಜಕೀಯ ಮಾಡಿ. ಟಿಪ್ಪು ಸುಲ್ತಾನ್ ಜಯಂತಿಯಲ್ಲಿ ನಾನು ಭಾಗವಹಿಸಿದರೆ ಹಿಂದೂ ವಿರೋಧಿ ಟಿಪ್ಪು ಬಗ್ಗೆ ಸರ್ಕಾರದಿಂದಲೇ ಪುಸ್ತಕ ಪ್ರಕಟಿಸಿ ಹಾಡಿ ಹೊಗಳಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಸ್ಲೀಂ ಗಣವೇಷ ಹಾಕಿ ಖಡ್ಗ ಹಿಡಿದು ಕುಣಿದ ಬಿ.ಎಸ್.ಯಡಿಯೂರಪ್ಪ, ಆರ್. ಅಶೋಕ್ ಹಿಂದೂಕುಲ ತಿಲಕರೇ ಎಂದು ಟೀಕಿಸಿದ್ದಾರೆ.
ಜಾತಿ ನಾಶವಾಗುವವರೆಗೆ ಮೀಸಲಾತಿ ಇರಬೇಕೆಂಬ ನನ್ನ ಮಾತಿಗೆ ನಾನೀಗಲೂ ಬದ್ದ. ಮಂಡಲ್ ವರದಿ ವಿರೋಧಿಸಿ ಮೈಗೆ ಬೆಂಕಿ ಹಚ್ಚಿಕೊಂಡಿದ್ದ ಬಿಜೆಪಿ ನಾಯಕರೇ ಈಗ ನಿಮಗೆ ಮೀಸಲಾತಿ ವಿರೋಧಿಸುವ ತಾಖತ್ ಇದೆಯೇ? ಎಂದು ಪ್ರಶ್ನಿಸಿದ್ದಾರೆ.
ಅಂದಹಾಗೆ ಬಿಜೆಪಿ ನಾಯಕರೇ, ನಿಮ್ಮ ಮಾತೃಸಂಸ್ಥೆಯಾದ ಆರ್.ಎಸ್.ಎಸ್.ಗೆ ಚುನಾವಣೆ ಇಲ್ಲದೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದೇ ಜಾತಿಯವರೇ ಯಾಕೆ? ಚುನಾವಣೆಯಲ್ಲಿ ಆಯ್ಕೆಯಾಗುವ ಬಿಜೆಪಿ ಅಭ್ಯರ್ಥಿಗಳಲ್ಲಿ ಎಲ್ಲಾ ಜಾತಿಗಳಿಗೆ ಸೇರಿದವರು ಇರುವುದು ಯಾಕೆ? ಎಂದು ಕೇಳಿದ್ದಾರೆ.