ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಆಯ್ಕೆಯಾಗಿದ್ದಾರೆ. ಕ್ಷೇತ್ರದ ಮತದಾರರು ಶ್ರೀನಿವಾಸ್ ಮಾನೆ ಅವರ ಕೈ ಹಿಡಿದಿದ್ದಾರೆ. ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ ಅವರನ್ನು ಸೋಲಿಸುವ ಮೂಲಕ ಮುಖ್ಯಮಂತ್ರಿ ತವರು ಕ್ಷೇತ್ರದಲ್ಲೇ ಆಡಳಿತಾರೂಢ ಬಿಜೆಪಿಗೆ ಮುಖಭಂಗವಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ 87,113 ಮತಗಳನ್ನು ಪಡೆದಿದ್ದರೆ ಪ್ರತಿಸ್ಪರ್ಧಿ ಬಿಜೆಪಿಯ ಶಿವರಾಜ್ ಸಜ್ಜನ್ 79515 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಮಾನೆ ಅವರು ಸಜ್ಜನ್ ಅವರಿಗಿಂತ 7,598 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಶ್ರೀನಿವಾಸ್ ಮಾನೆ ಗೆಲುವು ಸಾಧಿಸುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಹಾನಗಲ್ ನಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು. ಕಾಂಗ್ರೆಸ್ ಬಾವುಟಗಳನ್ನು ಹಿಡಿದು ಮಾನೆ ಪರ ಜಯಘೋಷಗಳನ್ನು ಮೊಳಗಿಸಿದರು. ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪರ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದರು.
ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಮೂಲಕ ನಿರಾಯಾಸವಾಗಿ ಒಂದು ಸ್ಥಾನವನ್ನು ಪಡೆದುಕೊಂಡಿದೆ. ಬಿಜೆಪಿ ಹಾನಗಲ್ ಕ್ಷೇತ್ರವನ್ನು ಕಳೆದುಕೊಂಡಿದ್ದು ಸಿಂಧಗಿಯಲ್ಲಿ ಉಳಿಸಿಕೊಂಡಿದೆ. ಸಿಂಧಗಿ ಕ್ಷೇತ್ರ ಜೆಡಿಎಸ್ ಕೈತಪ್ಪಿ ಹೋಗಿದೆ.
ಗೆಲುವು ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಾನೆ, “ಸರ್ಕಾರದ ಜನವಿರೋಧಿ, ದುರಾಳಿತದ ವಿರುದ್ಧ ತೀರ್ಪು ನೀಡಿದ್ದಾರೆ. ಬಿಜೆಪಿ ಸರ್ಕಾರ ಎಲ್ಲಾ ರಂಗದಲ್ಲಿಯೂ ವಿಫಲವಾಗಿದೆ. ಜೊತೆಗೆ ಕ್ಷೇತ್ರದಲ್ಲಿ ಆಡಳಿತ ಹದಗೆಟ್ಟಿದೆ. ಇದನ್ನು ಸರಿದಾರಿಗೆ ತರುವ ಕೆಲಸ ಮಾಡುತ್ತೇನೆ” ಎಂದು ಭರವಸೆ ನೀಡಿದರು.


