ಅಂತಾರಾಷ್ಟ್ರೀಯ ಮಟ್ಟದ ಬಿಟ್ ಕಾಯಿನ್ ಹಗರಣ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿದ್ದು ಪ್ರಕರಣದ ತನಿಖೆಗೆ ಜಾರಿ ನಿರ್ದೇಶನಾಲಯಕ್ಕೆ ಬರೆದಿರುವ ಪತ್ರವನ್ನು ಬಹಿರಂಗಪಡಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಈ ಪ್ರಕರಣದ ಕುರಿತು ಆರೋಪಪಟ್ಟಿ ಸಲ್ಲಿಸಿರುವುದಾಗಿ ಹೇಳಿದೆ. ಆರೋಪ ಪಟ್ಟಿ ಸಲ್ಲಿಸಿದ್ದರೆ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ ವಹಿಸುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು.
ಹಿಂದೆ ಯಾವ ತನಿಖಾ ಸಂಸ್ಥೆ ತನಿಖೆ ಮಾಡಿತ್ತು. ಯಾವ ಹಂತದಲ್ಲಿ ತನಿಖೆ ಇತ್ತು. ಯಾರನ್ನು ತನಿಖೆಗೆ ಒಳಪಡಿಸಲಾಗಿತ್ತು ಎಷ್ಟು ಜನರನ್ನು ಬಂಧಿಸಲಾಗಿದೆ. ತನಿಖೆ ಮಾಡಿದ ಅಧಿಕಾರಿಗಳು ಯಾರು? ಯಾವ ವರದಿ ನೀಡಲಾತಿತ್ತು. ಆ ತನಿಖೆಯಲ್ಲಿ ಸಿಕ್ಕ ಮಾಹಿತಿ ಏನು? ಯಾರ್ಯಾರು ಭಾಗಿಯಾಗಿದ್ದಾರೆ ಎಂಬ ದಾಖಲೆ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.
ಬಿಟ್ ಕಾಯಿನ್ ಅಂದರೆ ಏನು? ಮಾಲಿಕರು ಯಾರು? ಯಾವ ಕಾಯ್ದೆ ಸೆಕ್ಷನ್ ಅಡಿ ಪ್ರಕರಣವನ್ನು ತನಿಖಾ ಸಂಸ್ಥೆಗೆ ವಹಿಸಿದೆ. ಆರೋಪ ಪಟ್ಟಿ ಸಲ್ಲಿಸದ ಮೇಲೆ ಇಡಿಗೆ ಯಾಕೆ ಹೋಗಬೇಕು. ಆದ್ದರಿಂದ ಈ ಪ್ರಕರಣದ ಬಗ್ಗೆ ಜನರಿಗೆ ಸ್ಪಷ್ಟ ಚಿತ್ರಣ ನೀಡಬೇಕು ಎಂದು ಕೇಳಿದರು.
ಯಾರು ಡ್ರಗ್ ನಲ್ಲಿ, ಬಿಟ್ ಕಾಯಿನ್ ನಲ್ಲಿ ಈಜಿದ್ದಾರೋ ಗೊತ್ತಿಲ್ಲ. ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಈ ಪ್ರಕರಣ ಇರುವುದರಿಂದ ಸರ್ಕಾರವೇ ಮಾಹಿತಿ ನೀಡಬೇಕು. ತನಿಖೆಗೆ ಕೊಟ್ಟಿರುವ ವಿವರಗಗಳನ್ನು ಬಹಿರಂಗಪಡಿಸಬೇಕು. ಇಲ್ಲದಿದ್ದರೆ ವಿರೋಧ ಪಕ್ಷವಾಗಿ ನಾವು ಏನು ಮಾಡಬೇಕು ಎಂದು ನಮಗೆ ಗೊತ್ತಿದೆ ಎಂದು ಹೇಳಿದರು.
ಬಿಜೆಪಿಗೆ ಮುಖಭಂಗ:
ಈಗ ದೇಶಾದ್ಯಂತ ನಡೆದಿರುವ ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಕ್ಕೂ ನಷ್ಟವಾಗಿದೆ. ದೇಶದ ಹಲವೆಡೆ ಕಾಂಗ್ರೆಸ್ ಪಕ್ಷಕ್ಕೆ ಜನ ಆಶೀರ್ವಾದ ಮಾಡಿದ್ದು ಬಿಜೆಪಿ ಕೆಲವೆಡೆ ಸ್ಥಾನ ಉಳಿಸಿಕೊಂಡಿದ್ದರೂ ಮುಖಭಂಗ ಅನುಭವಿಸಿದೆ. ಸಿಂದಗಿ ಕ್ಷೇತ್ರವನ್ನು ಬಿಜೆಪಿ ಪಡೆಯುವಲ್ಲಿ ಯಶಸ್ವಿಯಾಗಿದೆ. ಆದರೆ ಹಾನಗಲ್ ನಲ್ಲಿ ಬಿಜೆಪಿ ಸೋತಿದೆ. ಸರ್ಕಾರ ಎಷ್ಟೇ ಆಮಿಷ ಒಡ್ಡಿದರೂ ಕ್ಷೇತ್ರದ ಮತದಾರರು ಕಾಂಗ್ರೆಸ್ ಕೈ ಹಿಡಿದು ದೇಶಕ್ಕೆ ದೊಡ್ಡ ಸಂದೇಶ ರವಾನಿಸಿದ್ದಾರೆ. ಇದಕ್ಕೆ ಎಲ್ಲಿರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.


