ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ನಾಯಕರು ವಿನಾಕಾರಣ ಟೀಕೆ ಅಪಪ್ರಚಾರ ಮಾಡುತ್ತಿದ್ದು, ಬಿಜೆಪಿ ಮುಖಂಡರು ವಿಚಾರಗಳನ್ನು ತಿರುಚುವುದರಲ್ಲಿ ನಿಸ್ಸೀಮರು. ರಾಜ್ಯ ಮತ್ತು ದೇಶದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ವಿಷಯಾಂತರ ಮಾಡುವುದು ಬಿಜೆಪಿಯ ಹುಟ್ಟುಗುಣವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದರು.
ದಲಿತರ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ. ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದರೆ. ಆದರೂ ಬಿಜೆಪಿ ಒಂದು ಸುಳ್ಳನ್ನು ನೂರು ಬಾರಿ ಹೇಳಿ ನಿಜ ಮಾಡಲು ಹೊರಟಿದೆ. ಬಿಜೆಪಿಗೆ ದಲಿತರ ಮೇಲೆ ಕಾಳಜಿ ಇದ್ದರೆ, ಜನಸಂಖ್ಯೆ ಆಧಾರದ ಮೇಲೆ ಬಜೆಟ್ ನಲ್ಲಿ ಹಣ ಮೀಸಲಿಡುವ ಕಾನೂನು ಮಾಡಲಿ ಎಂದು ಸವಾಲು ಹಾಕಿದರು.
“ನಮ್ಮಲ್ಲಿ ದಲಿತ ಸಮುದಾಯಕ್ಕೆ ಸೇರಿದ ರಂಗನಾತ್, ರಾಥೋಡ್, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಬಿಜೆಪಿ ಎಷ್ಟು ದಲಿತರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದೆ ಹೇಳಲಿ.
ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಹಾಗು ಪರಮೇಶ್ವರ್ ಅವರನ್ನು ಮುಗಿಸಿದ್ದೇ ಸಿದ್ದರಾಮಯ್ಯ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಉತ್ತರಿಸಿದ ಅವರು, ಖರ್ಗೆ ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 80 ಸ್ಥಾನ ಪಡೆದಿತ್ತು. ಆಗ ನಮ್ಮ ಸರ್ಕಾರ ಬಂದಿದ್ದರೆ ಅವರೇ ಸಿಎಂ ಆಗುತ್ತಿದ್ದರು ಎಂದು ಹೇಳಿದರು.
ಬಿಜೆಪಿ ಸರ್ಕಾರದಲ್ಲಿ 35 ಸಚಿವರು ಇದ್ದಾರೆ. ಅದರಲ್ಲಿ ಮೂಲ ಬಿಜೆಪಿಗರು ಕೇವಲ 7 ಮಂದಿ. ಉಳಿದ 28 ಮಂದಿ ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ವಲಸೆ ಹೋದವರೇ ಆಗಿದ್ದಾರೆ. ಹಾಗಾದರೆ ಮೂಲ ಬಿಜೆಪಿಯವರ ಕಥೆ ಏನಾಯ್ತು.
ನಮ್ಮಲ್ಲಿ ಶೇ.80ರಷ್ಟು ಮೂಲ ಕಾಂಗ್ರೆಸ್ಸಿಗರು, 20ರಷ್ಟು ನಮ್ಮ ಪಕ್ಷಕ್ಕೆ ಸೇರಿಕೊಂಡಿದ್ದಾರೆ. ನಾರಾಯಣಸ್ವಾಮಿಯು ನಮ್ಮ ಪಕ್ಷದಲ್ಲಿದ್ದವರೇ. ಅಂಬೇಡ್ಕರ್ ಮೀಸಲಾತಿ ತಂದರೆ ಕಾಂಗ್ರೆಸ್ ಅದನ್ನು ಪಾಲಿಸಿಕೊಂಡು ಬಂದಿದೆ ಎಂದರು.


