ಕಮಲಾ ನೆಹರು ಮಕ್ಕಳ ಆಸ್ಪತ್ರೆಯಲ್ಲಿ ವಿಶೇಷ ನವಜಾತ ಶಿಶು ಆರೈಕೆ ಘಟಕದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಟ ನಾಲ್ಕು ಶಿಶುಗಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಸರ್ಕಾರ ಆದೇಶಿಸಿದೆ. ಕಾಂಗ್ರೆಸ್ ನಾಯಕರು ಭೋಪಾಲ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಶಿಶು ಆರೈಕೆ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದಾರೆ. ವಾರ್ಡ್ ಒಳಗಿನ ಪರಿಸ್ಥಿತಿ ತುಂಬಾ ಭಯಾನಕವಾಗಿದೆ ಎಂದು ವಿವರಿಸಿದ್ದಾರೆ.
ಐಸಿಯು ಇರುವ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ವಿಶೇಷ ನವಜಾತ ಶಿಶು ಆರೈಕೆ ಘಟಕ ವಾರ್ಡ್ ನಲ್ಲಿ ನಾಲ್ಕು ಶಿಶುಗಳು ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಕೂಡಲೇ ನಾವು ಸ್ಥಳಕ್ಕೆ ಬಂದೆವು. ವಾರ್ಡ್ ಒಳಗೆ ಕತ್ತಲೆಯಾಗಿತ್ತು. ನಾವು ಮಕ್ಕಳನ್ನು ಪಕ್ಕದ ವಾರ್ಡ್ ಗೆ ಸ್ಥಳಾಂತರಿಸಿದ್ದೇವೆ ಎಂದು ವಿವರಿಸಿದರು.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬೆಂಕಿದುರಂತದಲ್ಲಿ ಮೃತರಾದ ಶಿಶುಗಳ ಕುಟುಂಬದ ಸದಸ್ಯರಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಶಿಶು ಆರೈಕೆ ಘಟಕದಲ್ಲಿ 40 ಶಿಶುಗಳು ಇದ್ದವು. ಈ ಪೈಕಿ 36 ಶಿಶುಗಳನ್ನು ಸ್ಥಳಾಂತರಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಭೋಪಾಲ್ ನ ಕಮಲಾ ನೆಹರು ಆಸ್ಪತ್ರೆಯಲ್ಲಿ ಅಮಾಯಕ ಶಿಶುಗಳ ಸಾವಿನ ಹೃದಯ ವಿದ್ರಾವಕ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ರೋಶನ್ ಪುರ ಚೌಕದಲ್ಲಿ ಶ್ರದ್ದಾಂಜಲಿ ಸಲ್ಲಿಸಿದರು. ವಿಶ್ವಾಸ್ ಸಾರಂಗ್ ಬಂಗಲೆಗೆ ಕಾಂಗ್ರೆಸ್ ನಾಯಕರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು.


