ತಮಿಳುನಾಡಿನಲ್ಲಿ ಸುರಿಯುತ್ತಿರುವ ಮಳೆಗೆ ಇದುವರೆಗೆ 14 ಮಂದಿ ಬಲಿಯಾಗಿದ್ದಾರೆ. ಇಂದೂ ಕೂಡ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಆಗಮನ ಮತ್ತು ನಿರ್ಗಮನವನ್ನು ಸ್ಥಗಿತಗೊಳಿಸಲಾಗಿದೆ.
ಭಾರೀ ಮಳೆಗೆ 157 ಜಾನುವಾರುಗಳು ಮೃತಪಟ್ಟಿವೆ. 1,146 ಗುಡಿಸಲುಗಳು ಮತ್ತು 237 ಮನೆಗಳಿಗೆ ತೀವ್ರ ಹಾನಿಯಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಗಾಳಿಯ ತೀವ್ರತೆಯನ್ನು ಪರಿಗಣಿಸಿ, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ನಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಿನಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.
ಉತ್ತರ ಚೆನ್ನೈ, ತಿರುವಳ್ಳೂರು, ಚೆಂಗಲ್ ಪೇಟ್, ಕಾಂಚೀಪುರಂ, ರಾಣಿಪೇಟ್, ವಿಲ್ಲುಪುರಂ ಮತ್ತು ಕಡಲೂರು ಜಿಲ್ಲೆಗಳು ಸೇರಿ ತಮಿಳುನಾಡಿನ ಕೆಲವು ಭಾಗಗಳಲ್ಲಿ ಗುರುವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು ಸಂಜೆಯ ವೇಳೆಗೆ ಚಂಡಮಾರುತ ವಾಯುವ್ಯ ದಿಕ್ಕಿನಲ್ಲಿ ಚಲಿಸಿ ಉತ್ತರ ತಮಿಳುನಾಡು, ಕಾರೈಕಾಲ್ ಮತ್ತು ಶ್ರೀಹರಿಕೋಟ ನಡುವೆ ಆಂದ್ರ ಕರಾವಳಿಯನ್ನು ದಾಟುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಗುರುವಾರ ಸುರಿದ ಮಳೆಗೆ ಚೆನ್ನೈನ ಹಲವು ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ಏಳು ರಸ್ತೆಗಳು ಮತ್ತು 11 ಸುರಂಗ ಮಾರ್ಗಗಳಲ್ಲಿ ಸಂಚಾರ ಬಂದ್ ಆಗಿದೆ.
ಪ್ರತಿಕೂಲ ಹವಾಮಾನದ ಕಾರಣ ವಿಮಾನಗಳ ಹಾರಾಟ ಸಾಮಾನ್ಯವಾಗಿದೆ. ವಿಮಾನ ನಿಲ್ದಾಣದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ.
ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಳೆ ಸಂಬಂಧ ಸಚಿವರು ಮತ್ತು ವಿಶೇಷ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದು ಪರಿಸ್ಥಿತಿಯ ಮಾಹಿತಿ ಪಡೆಯುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಪರಿಹಾರ ಶಿಬಿರಗಳಲ್ಲಿ ಗುಣಮಟ್ಟದ ಆಹಾರ ಮತ್ತು ವೈದ್ಯಕೀಯ ಸೌಲಭ್ಯ ಒದಗಿಸುವಂತೆ ಸೂಚಿಸಿದ್ದಾರೆ.


