ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಬೆಳೆಗಳು ಹೊಲಗದ್ದೆಗಳಲ್ಲಿ ಕೊಳೆತು ಹೋಗುವಂತಾಗಿದ್ದು ರಾಜ್ಯ ಸರ್ಕಾರ ಬೆಳೆಗಳ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ನವೆಂಬರ್ ತಿಂಗಳ ಮಧ್ಯಭಾಗಕ್ಕೆ ಬರುತ್ತಿದ್ದರೂ ರಾಜ್ಯದಲ್ಲಿ ಮಳೆ ನಿಲ್ಲುತ್ತಿಲ್ಲ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪರಿಣಾಮ ಕೊಯಿಲಿಗೆ ಬಂದ ಬೆಳೆಗಳು ಹೊಲಗದ್ದೆಗಳಲ್ಲೇ ಕೊಳೆತು ಹೋಗುತ್ತಿದ್ದು, ರೈತರ ನೆರವಿಗೆ ಧಾವಿಸಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದ್ದಾರೆ.
ಮುಂಗಾರು ಬೆಳೆಗಳಾದ ರಾಗಿ, ಭತ್ತ, ಮುಸುಕಿನ ಜೋಳ, ತೊಗರಿ, ಹತ್ತಿ, ಮೆಣಸಿನಕಾಯಿ, ಶೇಂಗಾ, ಹೆಸರು, ಉದ್ದು, ಮೊದಲಾದವುಗಳ ಕೊಯಿಲಿನ ಕೆಲಸ ನಡೆಯುತ್ತಿದೆ. ಮಳೆಯೂ ಎಡೆಬಿಡದೆ ಸುರಿಯುತ್ತಿದ್ದು ಇದು ಸಮಸ್ಯೆಯಾಗಿದೆ. ಆರಂಭದಲ್ಲಿ ಬಿತ್ತನೆ ಮಾಡುವಾಗ ಮಳೆ ಕೈಕೊಟ್ಟು ದಕ್ಷಿಣ ಒಳನಾಡು ಸೇರಿ ಹಲವು ಜಿಲ್ಲೆಗಳಲ್ಲಿ ರೈತರು ಹಾಕಿದ ಬಿತ್ತನೆ ಬೀಜಗಳು ಹುಟ್ಟಿರಲಿಲ್ಲ ಎಂದು ಸರ್ಕಾರದ ಗಮನ ಸೆಳೆದಿದ್ದಾರೆ.
ಈ ನಡುವೆ ಗೊಬ್ಬರವೂ ಸಿಗದ ತೊಂದರೆಯ ನಡುವೆಯೂ ರೈತರು ಕಷ್ಟಪಟ್ಟು ಬೆಳೆಗಳನ್ನು ಬೆಳೆದಿದ್ದು ರೈತಾಪಿ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ. ಮಲೆನಾಡು, ಕರಾವಳಿ ಪ್ರದೇಶದಲ್ಲಿ ಮಳೆಯಾಗುತ್ತಿದ್ದು ಅಡಿಕೆ, ಕಾಫಿ, ಮೆಣಸು ರೋಗಕ್ಕೆ ಸಿಲುಕಿವೆ. ಮೆಣಸು, ಕಾಫಿಗೆ ಕೊಳೆರೋಗ ಬಂದಿದೆ. ಇದು ರೈತರನ್ನು ಕಂಗಾಲಾಗುವಂತೆ ಮಾಡಿದೆ ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ, ಬೆಂ.ನಗರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಭತ್ತ, ಮುಸುಕಿನ ಜೋಳ, ರಾಗಿ ಬೆಳೆಗಳಿಗೆ ಆಗಿರುವ ನಷ್ಟದ ಕುರಿತು ಸಮೀಕ್ಷೆ ನಡೆಸಿಲ್ಲ. ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕದಲ್ಲಿ ಸಾಕಷ್ಟು ಹಾನಿಯಾಗಿದೆ ಆದರೂ ಸರ್ಕಾರ ಕೈಕಟ್ಟಿ ಕುಳಿತಿದೆ ಎಂದು ದೂರಿದ್ದಾರೆ.
ನಷ್ಟವಾಗಿರುವ ರೈತರ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡುವುದಾಗಲೀ, ಪರಿಹಾರ ನೀಡುವುದಾಗಲಿ ಮಾಡುತ್ತಿಲ್ಲ. ಕೇಂದ್ರ ಸರ್ಕಾರ ಸಮರ್ಪಕ ಪರಿಹಾರ ನೀಡುತ್ತಿಲ್ಲ. 2021-21ರ ನಷ್ಟಕ್ಕೆ ಒಂದು ರೂ ಪರಿಹಾರ ನೀಡಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬಗ್ಗೆ ತೀವ್ರ ನಿರ್ಲಕ್ಷ್ಯ ತೋರಿರುವುದು ಅಮಾನವೀಯ ನಡವಳಿಕೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


