ಹಾನಗಲ್ ಕ್ಷೇತ್ರದಿಂದ ಆಯ್ಕೆಯಾಗಿರುವ ಶ್ರೀನಿವಾಸ್ ಮಾನೆ ಅವರು ಪ್ರಮಾಣ ವಚನ ಸ್ವೀಕರಿಸಲು ಸ್ಪೀಕರ್ ಕಾಗೇರಿ ವಿಳಂಬ ಮಾಡಿರುವುದು ಪ್ರಜಾಪ್ರಭುತ್ವದಲ್ಲಿ ಒಳ್ಳೆಯ ಬೆಳವಣಿಗೆಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶ್ರೀನಿವಾಸ ಮಾನೆ ಪ್ರಮಾಣ ವಚನಕ್ಕೆ ಇಂದು ಬೆಳಗ್ಗೆ 11 ಗಂಟೆಗೆ ಸಮಯ ನೀಡಿದ್ದರು. ಟ್ರಾಫಿಕ್ ನಿಂದ ಮಾನೆ ಬರುವುದು 5 ನಿಮಿಷ ತಡವಾಯಿತು. ನಮ್ಮದು ತಪ್ಪು, ಆದರೂ ಸ್ಪೀಕರ್ ಸ್ವಲ್ಪ ಸಮಯಾವಕಾಶ ನೀಡಬಹುದಿತ್ತು. ಬೇರೆ ಕಾರ್ಯಕ್ರಮದ ಕಾರಣ ನೀಡಿ 12 ಗಂಟೆಗೆ ಸಮಯ ನಿಗದಿ ಮಾಡಿದರು. ಒಂದೂವರೆ ಗಂಟೆಯಿಂದ ಕಾದರೂ ಇನ್ನೂ ಬಂದಿಲ್ಲ ಎಂದರು.
ನಮಗೆ ಅವರ ಭಾವನೆಯೂ ಅರ್ಥವಾಗುತ್ತದೆ. ಹಾನಗಲ್ ಕ್ಷೇತ್ರದಲ್ಲಿ ಸೋಲಿನ ಆಕ್ರೋಶವನ್ನು ಸ್ಪೀಕರ್ ಈ ರೀತಿ ತೋರಿಸುತ್ತಿದ್ದಾರೆ. ಅವರು ಯಾವಾಗ ಸಮಯ ನಿಗದಿ ಮಾಡುತ್ತಾರೋ ಮಾಡಲಿ. ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯ ಬೆಳವಣಿಗೆಯಲ್ಲ. ಇಲ್ಲಿ ರಾಜಕಾರಣ ಮಾತನಾಡುವುದು ಬೇಡ ಎಂದು ಹೇಳಿದರು.
ತಡವಾಗಿದ್ದಕ್ಕೆ ಮಾಹಿತಿ ನೀಡಿದ್ದೆವು. ಅವರು ಶಿಸ್ತುಬದ್ಧ ಅಧಿವೇಶನ ನಡೆಸಿಕೊಂಡು ಬಂದಿದ್ದಾರೆ. ಹಾಗಾಗಿ ತಾಳ್ಮೆಯಿಂದ ಇರುತ್ತೇವೆ. ಧರಣಿ ಕೂರುವ ಹಕ್ಕು ನಮಗೂ ಇದೆ ಎಂದು ತಿಳಿಸಿದರು.
ಬಿಟ್ ಕಾಯಿನ್ ಪ್ರಕರಣ: ಬಂಧಿಸಲು ತಡವೇಕೆ?
ಬಿಟ್ ಕಾಯಿನ್ ಪ್ರಕರಣದಲ್ಲಿ ‘ಕಾಂಗ್ರೆಸ್ ನಾಯಕರ ಮಕ್ಕಳು ಭಾಗಿಯಾಗಿದ್ದರೆ, ಅವರನ್ನು ಬಂಧಿಸಲು ತಡ ಮಾಡುವುದೇಕೆ? ಕೂಡಲೇ ಬಂಧಿಸಲಿ. ಸಮಯ ವ್ಯರ್ಥ ಮಾಡುವುದೇಕೆ? ಆರೋಪಿ ಸ್ನೇಹಿತನಾಗಿದ್ದ ಮಾತ್ರಕ್ಕೆ ಪ್ರಕರಣದಲ್ಲಿ ಸಿಲುಕಿಸಲು ಸಾಧ್ಯವಿಲ್ಲ. ಇದು ಬೆಂಗಳೂರು, ಕರ್ನಾಟಕದ ಘನತೆಯ ವಿಚಾರ. ಹಾಗಾಗಿ ಪ್ರಕರಣದ ಸತ್ಯಾಂಶ ಹೊರಬರಬೇಕಿದೆ’ ಎಂದರು.
ಮುಖ್ಯಮಂತ್ರಿಗಳ ದೆಹಲಿ ಪ್ರವಾಸದ ಕುರಿತ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ‘ಮುಖ್ಯಮಂತ್ರಿಗಳು ಯಾಕೆ ಹೋದರೊ, ಏನು ಗುಸುಗುಸು ನಡೆಯುತ್ತಿದೆಯೋ, ಅವರ ಪಕ್ಷದ ನಾಯಕರೇ ಕರೆ ಮಾಡಿ, ಮುಖ್ಯಮಂತ್ರಿಗಳ ಬಗ್ಗೆ ಮಾತನಾಡುತ್ತಿದ್ದಾರೆ. ಈಗ ಆ ವಿಚಾರ ಮಾತನಾಡುವುದು ಬೇಡ’ ಎಂದು ಸ್ಪಷ್ಟಪಡಿಸಿದರು.
ಬಿಟ್ ಕಾಯಿನ್ ವಿಚಾರ ಜನರ ಮುಂದೆ ಬಿಚ್ಚಿಡಲಿ. ಈ ವಿಚಾರ ಪ್ರಧಾನಿ ಮುಂದೆ ಪ್ರಸ್ತಾಪ ಮಾಡಿದ್ದೇಕೆ? ಅವರು ಯಾಕೆ ತಲೆಕೆಡಿಸಿಕೊಳ್ಳಬೇಡಿ ಎಂದರು. ಯಾರಿಗಾದರೂ ತೊಂದರೆ, ಲಾಸ್ ಆಗಿದೆಯಾ? ಹೊರ ರಾಷ್ಟ್ರಗಳ ಹಣ ಹೋಗಿದೆಯಾ? ಅವರ ಹಸ್ತಕ್ಷೇಪ ಇದೆಯಾ? ಪ್ರಕರಣ ಹೇಗೆ ನಡೆದಿದೆ? ಯಾಕೆ ಬಂಧಿಸಿ ವಿಚಾರಣೆ ಮಾಡಿದರು? ಬಿಟ್ ಕಾಯಿನ್ ವಿಚಾರದಲ್ಲೇ ಯಾಕೆ ಎಫ್ಐಆರ್ ದಾಖಲಿಸಿದರು? ಎಲ್ಲ ಮಾಹಿತಿ ನೀಡಿ ಸ್ಪಷ್ಟತೆ ನೀಡಲಿ ಎಂದು ಕೇಳಿದರು.


