2017ರಲ್ಲಿ ಆಸ್ಪತ್ರೆಯ ಐಸಿಯು ಘಟಕದಲ್ಲಿ ಆಮ್ಲಜನಕದ ಕೊರತೆಯಿಂದ 70 ಮಕ್ಕಳ ಸಾವಿಗೆ ಕಾರಣವಾದ ಆರೋಪದ ಮೇಲೆ ಅಮಾನತುಗೊಂಡಿದ್ದ ಗೋರಖ್ ಪುರದ ಬಿಆರ್.ಡಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ಕಫೀಲ್ ಖಾನ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಸರ್ಕಾರಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಕ್ಕಳ ಸಾವು ಪ್ರಕರಣದ ತನಿಖೆಯಲ್ಲಿ ತಪ್ಪಿತಸ್ಥರೆಂದು ಕಂಡುಬಂದ ನಂತರ ಗೋರಖ್ ಪುರದ ಪಿಡಿಯಾಟ್ರಿಶಿಯನ್ ವಿಭಾಗದ ಡಾ. ಖಾನ್ ಅವರನ್ನು ವಜಾಗೊಳಿಸಲಾಗಿದೆ ಎಂದು ಉತ್ತರಪ್ರದೇಶದ ಪ್ರಧಾನ ಕಾರ್ಯದರ್ಶಿ ಅಲೋಕ್ ಕುಮಾರ್ ಖಚಿತಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಡಾ.ಖಾನ್ ಅವರನ್ನು ವಜಾಗೊಳಿಸಿದ ವಿವರವಾದ ಮಾಹಿತಿಯನ್ನು ನ್ಯಾಯಾಲಯಕ್ಕೆ ನೀಡಲಾಗುವುದು ಎಂದು ಅವರ ಸ್ಪಷ್ಟಪಡಿಸಿದರು.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, “ಖಾನ್ ವಜಾಗೊಳಿಸಿರುವುದರ ಹಿಂದೆ ದುರುದ್ದೇಶ ಅಡಗಿದೆ. ಅವರಿಗೆ ಕಿರುಕುಳ ನೀಡಲು ಸರ್ಕಾರ ಇದೆಲ್ಲವನ್ನೂ ಮಾಡುತ್ತಿದೆ. ಆದರೆ ಇದು ಸಂವಿಧಾನಕ್ಕಿಂತ ಮೇಲಲ್ಲ ಎಂಬುದನ್ನು ಸರ್ಕಾರ ನೆನಪಿನಲ್ಲಿಟ್ಟುಕೊಳ್ಳಬೇಕು. ಡಾ.ಖಾನ್ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದು ಅದಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತದೆ” ಎಂದು ಹೇಳಿದ್ದಾರೆ.


