ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ನವೆಂಬರ್ 15 ರಿಂದ ನ.18ರವರೆಗೆ ಭಾರೀ ಪ್ರಮಾಣ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು ಸೇರಿ ರಾಜ್ಯದ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮತ್ತು ತುಮಕೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಕರ್ನಾಟಕದ ಮಂಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮತ್ತು ಭಾರೀ ಪ್ರಮಾಣ ಮಳೆ ಬೀಳಲಿದೆ. ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಗುಡುಗು, ಮಿಂಚು ಸಹಿತ ಭಾರೀ ಮಳೆಯ ಸೂಚನೆ ನೀಡಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಕರ್ನಾಟಕದ ಪೂರ್ವ ಭಾಗದ ಜಿಲ್ಲೆಗಳಾದ ಚಿತ್ರದುರ್ಗ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲೂ ಭಾರೀ ಮತ್ತು ಅತಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ.
ವಿಶೇಷವಾಗಿ ಕೇರಳಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಭಾರೀ ಮತ್ತು ಅತಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಯಾವುದೇ ಲಕ್ಷಣಗಳು ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.


