ಬಿಟ್ ಕಾಯಿನ್ ಹಗರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಕಾಂಗ್ರೆಸ್ ಬಳಿ ದಾಖಲೆಗಳಿದ್ದರೆ ತನಿಖಾ ಸಂಸ್ಥೆಗಳಿಗೆ ನೀಡುವಂತೆ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಬಳಿ ಯಾವುದೇ ದಾಖಲೆ ಇದ್ದರೆ ಅದನ್ನು ಜಾರಿ ನಿರ್ದೇಶನಾಲಯ ಅಥವಾ ಪೊಲೀಸರಿಗೆ ನೀಡಿದರೆ ಅದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಸತ್ಯಾಂಶವಿದ್ದರೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ಕಾಂಗ್ರೆಸ್ ಸಮಸ್ಯೆ ಇಲ್ಲದಿದ್ದರೂ ಅದನ್ನು ಜೀವಂತವಾಗಿಡಲು ಬಯಸುತ್ತದೆ ಮತ್ತು ಇದು ರಾಜಕೀಯವಲ್ಲದೆ ಬೇರೇನೂ ಅಲ್ಲ ಎಂದು ಟೀಕಿಸಿದರು.
ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಎಂಬುವನಿಂದ ಒಂಬತ್ತುಕೋಟಿ ರೂಪಾಯಿ ಮೌಲ್ಯದ ಬಿಟ್ ಕಾಯಿನ್ ಗಳನ್ನು ಸಿಸಿಬಿ ಅಧಿಕಾರಿಗಳು ವಶಪಡಿಸಿಕೊಂಡ ನಂತರ ಪ್ರಭಾವಿ ರಾಜಕಾರಣಿಗಳು ಈ ಹಗರಣದಲ್ಲಿ ಭಾಗಿಯಾಗಿರುವ ಊಹಾಪೋಹಗಳಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಕಾಂಗ್ರೆಸ್ ನಾಯಕರು, ಬಿಜೆಪಿ ಹಿರಿಯ ನಾಯಕರು, ಅವರ ಕುಟುಂಬ ಸದಸ್ಯರು ಮತ್ತು ಹಿರಿಯ ಅಧಿಕಾರಿಗಳು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸರ್ಕಾರ ಈ ಹಗರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.


