ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯದ 16 ಮಂದಿ ಅಧಿಕಾರಿಗಳ ಮನೆ, ಕಚೇರಿ ಮತ್ತು ಅವರ ಆಪ್ತರ ಮನೆಗಳ ಮೇಲೆ ಬುಧವಾರ ಬೆಳ್ಳಂಬೆಳಗ್ಗೆಯೇ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಲ ಅಧಿಕಾರಿಗಳ ಮನೆಯಲ್ಲಿ ಕೋಟಿ ಕೋಟಿ ರೂಪಾಯಿ ಹಣ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಬೆಂಗಳೂರಿನಲ್ಲಿ 30 ಕಡೆ ಮತ್ತು ರಾಜ್ಯದ ಇತರ 30 ಕಡೆ ಎಸಿಬಿ ಅಧಿಕಾರಿಗಳು ಏಕಕಾಲದಲ್ಲೇ ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರಿನ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ವಾಸುದೇವ್, ಬೆಂಗಳೂರಿನ ನಂದಿನಿ ಡೈರಿ ಪ್ರಧಾನ ವ್ಯವಸ್ಥಾಪಕ ಬಿ. ಕೃಷ್ಣಾರೆಡ್ಡಿ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಯಶವಂತಪುರ ವಿಭಾಗದ ಡಿ ದರ್ಜೆ ನೌಕರ ಜಿ.ವಿ.ಗಿರಿ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಕಾವೇರಿ ನಿಗಮದ ಮಂಡ್ಯ ಹೇಮಾವತಿ ಎಡದಂತೆ ಕಾಲುವೆ ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ಶ್ರೀನಿವಾಸ್, ಮಂಗಳೂರು ಮಹಾನಗರ ಪಾಲಿಕೆ ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ಎಸ್.ಲಿಂಗೇಗೌಡ, ದೊಡ್ಡಬಳ್ಳಾಪುರ ಕಂದಾಯ ನಿರೀಕ್ಷಕ ಲಕ್ಷ್ಮೀನರಸಿಂಹಯ್ಯ, ಬಳ್ಳಾರಿ ನಿವೃತ್ತ ಸಬ್ ರಿಜಿಸ್ಟ್ರಾರ್ ಶಿವಾನಂದ ಮನೆಗಳ ಮೇಲೆ ಎಸಿಬಿ ದಾಳಿ ನಡೆದಿದೆ.
ಗದಗ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ರುದ್ರಪ್ಪ, ಗೋಕಾಕ್ ನ ಹಿರಿಯ ಮೋಟಾರು ವಾಹನ ನಿರೀಕ್ಷಕ ಸದಾಶಿವ, ಸವದತ್ತಿ ಸಹಕಾರ ಅಭಿವೃದ್ಧಿ ಅಧಿಕಾರಿ ಎ.ಕೆ.ಮಾಸ್ತಿ, ಬೆಳಗಾವಿ ಹೆಸ್ಕಾಂ ಸಿ. ದರ್ಜೆ ನೌಕರ ನೇತಾಜಿ ಪಾಟೀಲ್, ಬೆಂಗಳೂರು ಸಕಾಲ ಸೇವೆಯ ಕೆಎಎಸ್ ಅಧಿಕಾರಿ ಎಲ್.ಸಿ.ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ವೈದ್ಯ ರಾಜಶೇಖರ್ ಮನೆಗಳ ಮೇಲೆ ದಾಳಿ ನಡೆದಿದ್ದು ಕೆಲವು ಕಡೆ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.
ಎಂಟು ಎಸ್.ಪಿ. 11 ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮತ್ತು ಅಪ್ತರ ಮನೆಗಳಲ್ಲಿ ಎಸಿಬಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.