ಕೃಷಿ ಕಾಯ್ದೆಗಳ ರದ್ಧತಿ ಘೋಷಣೆ ಮಾಡಬೇಕು, ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೊಳಿಸಬೇಕು. ವಿದ್ಯುತ್ ಮಸೂದೆ ವಾಪಸ್ ಪಡೆಯಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಮಾಡಬೇಕು. ರಾಜ್ಯದಲ್ಲಿ ಭೂಸುಧಾರಣೆ ಮಸೂದೆ ಮತ್ತು ಎಪಿಎಂಸಿ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಸಮಿತಿ ನವೆಂಬರ್ 26ರಂದು ಹೆದ್ದಾರಿ ಬಂದ್ ನಡೆಸಲಿದೆ.
ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಂಯುಕ್ತ ಹೋರಾಟ ಸಮಿತಿ ಮುಖಂಡರಾದ ಎ.ಗೋವಿಂದರಾಜ್, ಸಿ.ಯತಿರಾಜು ಮತ್ತು ಆನಂದ ಪಟೇಲ್, ಮಳೆಯಿಂದ ಹಾನಿಗೊಳಗಾಗಿರುವ ರೈತರ ಬೆಳೆಗಳಿಗೆ ಸೂಕ್ತ ಪರಿಹಾರ ನೀಡಬೇಕು. ಹಾಲಿನ ದರ ಏರಿಕೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಕೇಂದ್ರ ಮತ್ತು ಬಿಜೆಪಿ ಅಧಿಕಾರದಲ್ಲಿರುವ ಕರ್ನಾಟಕ ರಾಜ್ಯದಲ್ಲಿ ಸರ್ಕಾರ ರೈತರು, ದಲಿತರು, ಕಾರ್ಮಿಕರು ಮತ್ತು ವಿದ್ಯಾರ್ಥಿಗಳ ಮೇಲೆ ತೀವ್ರ ದಾಳಿ ನಡೆಸುತ್ತಿದೆ. ಮಳೆಯಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರ ನೆರವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಬರುತ್ತಿಲ್ಲ. ಇದನ್ನು ವಿರೋಧಿಸಿ ನವೆಂಬರ್ 26ರಂದು ಬೆಳಗ್ಗೆಯಿಂದ ಸಂಜೆಯವರೆಗೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಚದಲಪುರ ಕ್ರಾಸ್, ಶ್ರೀರಂಗಪಟ್ಟಣ, ತುಮಕೂರು ಜಾಸ್ ಟೋಲ್, ಹೆದ್ದಾರಿ 13ರಲ್ಲಿ ಹೊಸಪೇಟೆ ಜಂಕ್ಷನ್, ದೇವದುರ್ಗ ಕ್ರಾಸ್ ಇತ್ಯಾದಿ ಪ್ರಮುಖ ಹೆದ್ದಾರಿಗಳಲ್ಲಿ ರೈತರು, ವಿದ್ಯಾರ್ಥಿಗಳು, ಕಾರ್ಮಿಕರು, ದಲಿತರು, ಯುವಜನರು, ಮಹಿಳೆಯರು, ಕನ್ನಡಪರ ಸಂಘಟನೆಗಳು ಹೆದ್ದಾರಿ ತಡೆದು ಬಂದ್ ನಡೆಸಲಿದ್ದಾರೆ ಎಂದು ಹೇಳಿದರು.
ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಗೋ ಮಸೂದೆ ತಿದ್ದುಪಡಿ ಕಾಯ್ದೆಗಳನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.


