ಮುಂದಿನ ದಿನಗಳಲ್ಲಿ ಉತ್ತರ ಪ್ರದೇಶ ಮತ್ತು ಇತರೆ ರಾಜ್ಯಗಳಲ್ಲಿ ಚುನಾವಣೆ ನಡೆಯದಿದ್ದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳುತ್ತಿರಲಿಲ್ಲ ಎಂದು ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲಿದೆ ಎಂದು ಮಾಧ್ಯಮಗಳಿಗೆ ತಿಳಿಸಿದರು. ಈಗ ಚುನಾವಣೆ ನಡೆದರೆ ಮೂರು ಪಕ್ಷಗಳ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉತ್ತರ ಪ್ರದೇಶ ಮತ್ತು ಇತರೆ ರಾಜ್ಯಗಳಲ್ಲಿ ಚುನಾವಣೆಗಳಿವೆ. ಈ ರಾಜ್ಯಗಳಲ್ಲಿ ಬಿಜೆಪಿ ಮುಖಂಡರು ಕೆಲವು ಭಾಗಗಳ ಹಳ್ಳಿಗಳಿಗೆ ಭೇಟಿ ನೀಡಿದಾಗ ಸ್ಥಳೀಯರಿಂದ ಭಿನ್ನ ರೀತಿಯ ಸ್ವಾಗತ ಸಿಕ್ಕಿದೆ. ಇದು ಕೃಷಿ ಕಾಯ್ದೆಗಳ ವಾಪಸ್ ನಿರ್ಧಾರಕ್ಕೆ ಕಾರಣ. ಮತ ಕೇಳಲು ಹೋದರೆ ಜನರು ವಿರೋಧ ವ್ಯಕ್ತಪಡಿಸಬಹುದು ಎಂಬುದನ್ನು ಅರಿತಿರುವ ಕೇಂದ್ರ ಸರ್ಕಾರ ಪ್ರಾಯೋಗಿಕ ನಿರ್ಧಾರ ಕೈಗೊಂಡಿದೆ ಎಂದು ಹೇಳಿದರು.
ಭವಿಷ್ಯದಲ್ಲಿ ಈ ರಾಜ್ಯಗಳಲ್ಲಿ ಯಾವುದೇ ಚುನಾವಣೆಗಳಿಲ್ಲದಿದ್ದರೆ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.
ಹೊಸ ವರ್ಷದಲ್ಲಿ ರಾಜ್ಯ ಸರ್ಕಾರ ಬದಲಾಗಲಿದೆ ಎಂಬ ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಪವಾರ್, ಎರಡು ವರ್ಷಗಳ ಹಿಂದೆ ಶಿವಸೇನೆ, ಎನ್ಸಿಪಿ ಮತ್ತು ಕಾಂಗ್ರೆಸ್ನ ಎಂವಿಎ ಸರ್ಕಾರ ರಚನೆಯಾದ ನಂತರ ಅದು ಪತನವಾಗಲಿದೆ ಎಂದು ಹೇಳಲಾಯಿತು.
ಈಗ ”ಪಾಟೀಲ್ ಅವರಿಗೆ ಸಮಯವಿರುವುದರಿಂದ ಜ್ಯೋತಿಷ್ಯದಲ್ಲಿ ಕೈ ಹಾಕುತ್ತಿದ್ದಾರೆ. ಅವರು ಅದನ್ನು ಆನಂದಿಸಲಿ, ಆದರೆ ಈ ಸರ್ಕಾರ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತದೆ ಎಂದು ತಿಳಿಸಿದರು.


