Thursday, April 23, 2026
Google search engine
Homeಮುಖಪುಟಬಿಬಿಎಂಪಿ ಆಯುಕ್ತರ ಆಯೋಗ ಬಿಜೆಪಿ ಕೈಗೊಂಬೆ - ಕಾಂಗ್ರೆಸ್ ಆರೋಪ

ಬಿಬಿಎಂಪಿ ಆಯುಕ್ತರ ಆಯೋಗ ಬಿಜೆಪಿ ಕೈಗೊಂಬೆ – ಕಾಂಗ್ರೆಸ್ ಆರೋಪ

ಬಿಬಿಎಂಪಿ ಮುಖ್ಯ ಆಯುಕ್ತರ ನೇತೃತ್ವದ ಕ್ಷೇತ್ರ ಪುನರ್ ವಿಂಗಡಣಾ ಆಯೋಗ ಬಿಜೆಪಿ ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಆರೋಪಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಯೋಗ ಆಡಳಿತ ಪಕ್ಷಕ್ಕೆ ಅನುಕೂಲವಾಗುವ ರೀತಿ ಕ್ಷೇತ್ರ ಪುನರ್ ವಿಂಗಡಣೆ ಮಾಡಿ ಕರಡು ಪ್ರಸ್ತಾವನೆ ಸಲ್ಲಿಸಿದೆ. ಕರಡು ವರದಿಯನ್ನು ಗೆಜೆಟ್ ನಲ್ಲಿ ಪ್ರಕಟಿಸಿಲ್ಲ. ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿಲ್ಲ. ಆದರೂ ಇದನ್ನೇ ಅನುಷ್ಠಾನಕ್ಕೆ ತರುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದರು

ಬಿಬಿಎಂಪಿ ವಾರ್ಡುಗಳ ಪುನರ್ ವಿಂಗಡಣೆ ಸಂಬಂಧ ಸುಪ್ರೀಂಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿದೆ. ಡಿಸೆಂಬರ್ 6ರಂದು ವಿಚಾರಣೆಗೆ ಬರಲಿದೆ. ಅದನ್ನು ನೋಡಿಕೊಂಡು ಮುಂದಿನ ಹೆಜ್ಜೆ ಇಡಲಾಗುವುದು ಎಂದು ಹೇಳಿದರು.

ಬೆಂಗಳೂರು ನಗರ ಅಭಿವೃದ್ಧಿ ಖಾತೆ ಮುಖ್ಯಮಂತ್ರಿಗಳ ಬಳಿ ಇದ್ದರೂ ಬೆಂಗಳೂರು ಅಭಿವೃದ್ಧಿ ಬಗ್ಗೆ ಗಮನಹರಿಸುತ್ತಿಲ್ಲ, ನಗರ ಪ್ರದಕ್ಷಿಣೆ ಮಾಡುತ್ತಿಲ್ಲ. ಯಾವುದೇ ಕೆಲಸ ಆಗುತ್ತಿಲ್ಲ. ಅಧಿಕಾರಿಗಳು ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಏಳು ಬಿಜೆಪಿ ಶಾಸಕರಿದ್ದು, ಅವರ ಜೊತೆ ಸಭೆ ನಡೆಸಿಲ್ಲ. ಸಚಿವರು ಕ್ಷೇತ್ರ ಬಿಟ್ಟು ಬೇರೆ ಕಡೆ ಹೋದ ಉದಾಹರಣೆಯೇ ಇಲ್ಲ ಎಂದು ಟೀಕಿಸಿದರು.

ಬಿಬಿಎಂಪಿ ಮಾಜಿ ಮೇಯರ್ ಪಿ.ಆರ್. ರಮೇಶ್ ಮಾತನಾಡಿ, ಈಗ 243 ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಿ ಸರ್ಕಾರಕ್ಕೆ ಪ್ರಸ್ತಾವಣೆ ಕಳಿಸಿಕೊಟ್ಟಿದೆ. ಮುಖ್ಯ ಆಯುಕ್ತರ ಸಮಿತಿ ಕರಡು ವರದಿ ಸಲ್ಲಿಸಿದೆ. ಆದರೆ ಸಚಿವರು ಮತ್ತು ಶಾಸಕರು ಸರ್ಕಾರದ ಮೇಲೆ ಒತ್ತಡ ತಂದು ಅವೈಜ್ಞಾನಿಕವಾಗಿ ಕ್ಷೇತ್ರ ವಿಂಗಡಣೆ ಮಾಡಲು ಯತ್ನಿಸಲಾಗುತ್ತಿದೆ. ಇಂತಹ ತಾರತಮ್ಯ ಆದರೆ ಪರಿಶಿಷ್ಟರಿಗೆ ಅನ್ಯಾಯವಾಗುತ್ತದೆ ಎಂದರು.

ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನಿಗದಿಯಾಗಬೇಕು. ಚುನಾವಣೆ ಯಥಾವತ್ತಾಗಿ ನಡೆಸಬೇಕು. ಆದರೆ ಕಾಂಗ್ರೆಸ್ಸೇತರ ಸರ್ಕಾರಗಳು ಬಂದಾಗಲೆಲ್ಲಾ ಅವೈಜ್ಞಾನಿಕವಾಗಿ ಚುನಾವಣೆ ನಡೆಸಿವೆ. ಕಾಂಗ್ರೆಸ್ ಮಾತ್ರ ಅವಧಿಗೆ ಸರಿಯಾಗಿ ಚುನಾವಣೆ ನಡೆಸುತ್ತಾ ಬಂದಿದೆ. ಬಿಜೆಪಿ ಸಂವಿಧಾನಕ್ಕೆ ಗೌರವ ಕೊಡುತ್ತಿಲ್ಲ. ಪ್ರಜಾಪ್ರಭುತ್ವದ ಬಗ್ಗೆ ನಂಬಿಕೆ ಇಲ್ಲ ಎಂದು ದೂರಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular