ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮಾಡದೆ ಜನಸ್ವರಾಜ್ ಯಾತ್ರೆ ಮಾಡಿದರೆ ಏನು ಫಲ. ಪ್ರಧಾನಿ ನರೇಂದ್ರ ಮೋದಿ ಮೊದಲು ಸರ್ವಾಧಿಕಾರಿ ಮನಸ್ಥಿತಿ ಬದಲಿಸಿಕೊಂಡು ವಿಕೇಂದ್ರೀಕರಣದ ಕಡೆ ಕೆಲಸ ಮಾಡಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಹಮ್ಮಿಕೊಂಡಿದ್ದ ಗ್ರಾಮಸ್ವರಾಜ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆ ಇದ್ದಿದ್ದರೆ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಮುಂದೂಡುತ್ತಿರಲಿಲ್ಲ. ಪ್ರಧಾನಿ ಮೋದಿ ಅಧಿಕಾರ ಹಿಡಿದು ಎಂಟು ವರ್ಷವಾದರೂ ಸ್ಥಳೀಯ ಸಂಸ್ಥೆಗಳಿಗೆ ಆರ್ಥಿಕ ಬಲ ತುಂಬಲಿಲ್ಲ. ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸಲು ಯಾವುದೇ ಕಾರ್ಯಕ್ರಮ ರೂಪಿಸಲಿಲ್ಲ. ಇಂಥವರಿಗೆ ಜನಸ್ವರಾಜ್ ಯಾತ್ರೆ ನಡೆಸಲು ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಯಾವುದೇ ಸರ್ಕಾರಿ ಕಚೇರಿಗೆ ಹೋದರೂ ಕಾಸು ಕೇಳುತ್ತಾರೆ. ಇಂತಹ ದುಸ್ಥಿತಿ ನಿರ್ಮಾಣವಾಗಿದೆ. ಇದು ಸರ್ಕಾರ ಸೃಷ್ಟಿಸಿರುವ ಪರಿಸ್ಥಿತಿ. ಈ ಕುರಿತು ಬಿಜೆಪಿ ಮುಖಂಡರಾದ ಯತ್ನಾಳ್ ಮತ್ತು ವಿಶ್ವನಾಥ್ ಮಾತನಾಡಿದ್ದಾರೆ ಎಂದರು.
ರಾಜ್ಯದಲ್ಲಿ ಹಿಂದೆ ಇಂತಹ ಭ್ರಷ್ಟ ಆಡಳಿತವನ್ನು ಕಂಡಿರಲಿಲ್ಲ. ಚುನಾವಣೆ ಸಮಯದಲ್ಲಿ ಯಾರೂ ದೂರು ನೀಡದಿದ್ದರೂ ಪ್ರಧಾನಿ ಬಂದು ನಮ್ಮ ಸರ್ಕಾರವನ್ನು 10 ಪರ್ಸೆಂಟ್ ಸರ್ಕಾರ ಎಂದು ಆರೋಪಿಸಿದ್ದರು. ನಾವು ತಪ್ಪು ಮಾಡಿದ್ದರೆ ತನಿಖೆಗೆ ಆದೇಶ ಮಾಡಬಹುದಿತ್ತು. ಆದರೆ ಇದ್ಯಾವುದನ್ನು ಮಾಡಲಿಲ್ಲ ಎಂದರು.
ಆದರೆ ಈಗ ರಾಜ್ಯದ ಗುತ್ತಿಗೆದಾರರು ಪ್ರಧಾನಿಗೆ ಪತ್ರ ಬರೆದು ಕರ್ನಾಟಕದ ಬಿಜೆಪಿ ಸರ್ಕಾರ 40 ಪರ್ಸೆಂಟ್ ಲಂಚದ ಹಾವಳಿ ಬಗ್ಗೆ ದೂರಿ, ಪ್ರತಿಭಟನೆ ಮಾಡಿದ್ದಾರೆ. ರಾಜ್ಯದ ಎಲ್ಲ ಗುತ್ತಿಗೆದಾರರು ಬೃಹತ್ ಪ್ರತಿಭಟನೆ ಕಾರ್ಯಕ್ರಮ ರೂಪಿಸುತ್ತಿದ್ದಾರೆ. ಇದೊಂದು ಅತಿಭ್ರಷ್ಟ ಬಿಜೆಪಿ ಸರ್ಕಾರ. ಬೆಡ್, ಔಷಧಿ, ಹೆಣದ ಮೇಲೂ ಹಣ ವಸೂಲಿ. ಆಸ್ಪತ್ರೆಗಳ ಜತೆ ಒಪ್ಪಂದ ಮಾಡಿಕೊಂಡು ಹಣ ಮಾಡಿದೆ ಎಂದು ದೂರಿದರು.


