ರಾಜ್ಯದಲ್ಲಿ ಒಮಿಕ್ರಾನ್ ರೂಪಾಂತರದ ಎರಡು ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೊಸ ಕೊವಿಡ್ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಂಸ್ಕೃತಿ ಚಟುವಟಿಕೆಗಳ/ಉತ್ಸವಗಳು ಮತ್ತು ಕಾರ್ಯಕ್ರಮಗಳನ್ನು ಜನವರಿ 15ರವರೆಗೆ ಮುಂದೂಡುವಂತೆ ತಿಳಿಸಲಾಗಿದೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೊವಿಡ್ ನಿಯಂತ್ರಣದ ಕುರಿತ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.
ರಾಜ್ಯದಲ್ಲಿ ಅದೂ ರಾಜಧಾನಿ ಬೆಂಗಳೂರು ನಗರದಲ್ಲಿ ಒಮಿಕ್ರಾನ್ ರೂಪಾಂತರ ಸೋಂಕಿನ ಎರಡು ಪ್ರಕರಣ ಪತ್ತೆಯಾಗಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಕಳವಳ ವ್ಯಕ್ತಪಡಿಸಿದರು.
ಹೊಸ ಮಾರ್ಗಸೂಚಿಯ ಪ್ರಕಾರ ‘8 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳ ಪೋಷಕರು ಕೊವಿಡ್ ಲಸಿಕೆಯ ಎರಡೂ ಡೋಸ್ ಗಳನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು ಎಂದು ಹೇಳಿದೆ.
ಮಾಲ್ ಗಳು, ಚಿತ್ರಮಂದಿರಗಳು, ಥಿಯೇಟರ್ ಗಳಿಗೆ ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡ ವ್ಯಕ್ತಿಗಳಿಗೆ ಮಾತ್ರ ಪ್ರವೇಶವನ್ನು ನೀಡಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಿದೆ.
ಕೂಟಗಳು, ಸಭೆಗಳು, ಸಮ್ಮೇಳನಗಳು, ಮದುವೆಗಳು ಇತ್ಯಾದಿ ಕಾರ್ಯಕ್ರಮಗಳಿಗೆ 500 ಮಂದಿ ಭಾಗವಹಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕೊವಿಡ್ ಮಾರ್ಗಸೂಚಿಗಳನ್ನು ಅನುಸರಿಸುವಂತೆ ನೋಡಿಕೊಳ್ಳುವುದು ಸಂಘಟಕರ ಜವಾಬ್ದಾರಿಯಾಗಿರುತ್ತದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ಮತ್ತೆ ಕೋವಿಡ್ ಕಂಟ್ರೋಲ್ ರೂಂ ಸ್ಥಾಪಿಸಲಾಗುವುದು, ಐಸಿಯು, ಆಮ್ಲಜನಕ ಸಹಿತ ಹಾಸಿಗೆ, ವಾರ್ಡುಗಳನ್ನು ಸಜ್ಜುಗೊಳಿಸುವುದು ಮತ್ತು ಔಷಧಿಗಳ ದಾಸ್ತಾನಿಗೆ ಹೆಚ್ಚಿನ ಆದ್ಯತೆ ನೀಡಲು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ವಿದೇಶಗಳಿಂದ ಬರುವ ಪ್ರಯಾಣಿಕರಿಗೆ ಕೊವಿಡ್ ಪರೀಕ್ಷೆ ಕಡ್ಡಾಯವಾಗಿದ್ದು ನೆಗೆಟೀವ್ ಬಂದವರಿಗೆ ಮಾತ್ರ ಪ್ರವೇಶ ನೀಡಲು ತೀರ್ಮಾನಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ತುರ್ತು ಆರ್.ಟಿಪಿಸಿಆರ್ ಪರೀಕ್ಷೆಗೆ 3 ಸಾವಿರ ರೂ ನಿಗದಿಪಡಿಸಿದೆ.


