ಕೇಂದ್ರ ಸರ್ಕಾರ ಇಸ್ರೋವನ್ನು ಗುಜರಾತ್ ಗೆ ಸ್ಥಳಾಂತರಿಸುವ ಮತ್ತು ಖಾಸಗೀಕರಣಗೊಳಿಸುವುದನ್ನು ಕೈಬಿಡದಿದ್ದರೆ ತೀವ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಸ್ರೋ ಕೇಂದ್ರವನ್ನು ಸಮುದ್ರದ ಪಕ್ಕದಲ್ಲಿ ಮಾಡಬೇಕು ಎಂದಿದ್ದರೆ ಕರ್ನಾಟಕದಲ್ಲಿ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮಾಡಿದ್ದರೆ ಸಮಸ್ಯೆ ಎದುರಾಗುತ್ತಿರಲಿಲ್ಲ ಎಂದರು.
ತುಮಕೂರಿನ ಎಚ್.ಎಂ.ಟಿ ಮುಚ್ಚಿದ ಮೇಲೆ ಅಲ್ಲಿನ ಭೂಮಿಯನ್ನು ಇಸ್ರೋಗೆ ಹಸ್ತಾಂತರ ಮಾಡಲಾಗಿದೆ. ಹೀಗಾಗಿ ಬೆಂಗಳೂರು ಮತ್ತು ತುಮಕೂರು ಇಸ್ರೋ ಒಂದೇ ಎಂದು ತಿಳಿದುಕೊಂಡಿದ್ದೆವು. ಆದರೆ ಕೇಂದ್ರ ಸರ್ಕಾರ ಇದಕ್ಕೆ ವಿರುದ್ಧ ದಿಕ್ಕಿನಲ್ಲಿ ನಡೆದುಕೊಳ್ಳುತ್ತಿದೆ ಎಂದು ದೂರಿದರು.
ಮೇಕೆದಾಟು ಯೋಜನೆ ಆರಂಭ ಮಾಡಿ:
ಮೇಕೆದಾಟು ಯೋಜನೆ ಅನುಷ್ಠಾನಗೊಂಡರೆ ಬೆಂಗಳೂರು, ಹಾಸನ, ಕೋಲಾರ, ತುಮಕೂರು, ಮಂಡ್ಯ, ಚಾಮರಾಜನಗರ, ಮೈಸೂರು ಭಾಗದ ಜನರಿಗೆ ಕುಡಿಯುವ ನೀರು ಒದಗಿಸಲು ಸಾಧ್ಯವಾಗಲಿದೆ. ಬೆಂಗಳೂರು ನಗರಕ್ಕೆ ವಿದ್ಯುಚ್ಛಕ್ತಿ ಪೂರೈಕೆಗೆ ಸಹಕಾರಿಯಾಗುತ್ತದೆ ಎಂದರು.

ಮೇಕೆದಾಟು ಅಣೆಕಟ್ಟು ನಿರ್ಮಾಣವಾದರೆ ಸಮುದ್ರಕ್ಕೆ ವ್ಯರ್ಥವಾಗಿ ಹರಿದುಹೋಗುವ 160 ಟಿಎಂಸಿ ನೀರನ್ನು ಸದ್ಬಳಕೆ ಮಾಡಿಕೊಳ್ಳಬಹುದು ಮತ್ತು ಸಂಕಷ್ಟ ಕಾಲದಲ್ಲಿ ತಮಿಳುನಾಡಿಗೆ ನೀರು ಹರಿಸಬಹುದು. ಆಗ ಹೇಮಾವತಿಯಿಂದ ನೀರು ಬಡುವುದು ತಪ್ಪುತ್ತದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಸಾರ್ವಜನಿಕ ಸಂಸ್ಥೆಗಳನ್ನು ಹರಾಜ ಹಾಕುತ್ತಿದೆ. ರಾಜ್ಯದಲ್ಲಿ ಹುಟ್ಟಿಕೊಂಡು ಅಭಿವೃದ್ಧಿಯಾದ ಬ್ಯಾಂಕುಗಳನ್ನು ವಿಲೀನಗೊಳಿಸಿದೆ. ಹೀಗಾಗಿ ಸರ್ಕಾರಕ್ಕೆ ಒಂದು ಸ್ಪಷ್ಟ ಗುರಿಯಿಲ್ಲ ಎಂಬುದು ಇದರಿಂದ ತಿಳಿಯುತ್ತದೆ ಎಂದು ಟೀಕಿಸಿದರು.


