ಸಚಿವ ಈಶ್ವರಪ್ಪ ಅವರು ಸಂಪುಟ ಸಹೋದ್ಯೋಗಿ ಮುರುಗೇಶ್ ನಿರಾಣಿ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯನ್ನು ಬದಲಾಯಿಸುವ ಯಾವುದೇ ಪ್ರಸ್ತಾಪ ಬಿಜೆಪಿಯ ಮುಂದೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವದಂತಿಗಳಿಗೆ ಅಂತ್ಯಹಾಡಿದ ಜೋಶಿ, “ಈಗ ಪಕ್ಷದ ಮುಂದೆ ಯಾವುದೇ ಪ್ರಸ್ತಾಪವಿಲ್ಲ. ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ನಾನು ಇದನ್ನು ಹೇಳುತ್ತಿದ್ದೇನೆ. ಮುಖ್ಯಮಂತ್ರಿ ಬದಲಾಗುವುದಿಲ್ಲ. ಬಸವರಾಜ ಬೊಮ್ಮಾಯಿ ಅವರೇ ಹುದ್ದೆಯಲ್ಲಿ ಉಳಿಯುತ್ತಾರೆ. ನಾಯಕತ್ವ ಬದಲಾವಣೆ ಬಗ್ಗೆ ಯಾರೂ ಮಾತನಾಡಬಾರದು ಎಂದು ಹೇಳಿದ್ದಾರೆ.
ಬಿಳಗಿ ವಿಧಾನಸಭಾ ಕ್ಷೇತ್ರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಈಶ್ವರಪ್ಪ, ಅದು ಯಾವಾಗ ಆಗುತ್ತೋ ಗೊತ್ತಿಲ್ಲ. ಆದರೆ ನಿರಾಣಿಗೆ ಮುಖ್ಯಮಂತ್ರಿಯಾಗುವ ಸಾಮರ್ಥ್ಯವಿದ್ದು ಹಿಂದುಳಿದ ಸಮುದಾಯ ಮತ್ತು ಬಡವರಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬದಲಾಯಿಸುವುದಿಲ್ಲ ಎಂದು ತಿಲಿಸಿದರು.
ಸಚಿವ ಸಂಪುಟ ವಿಸ್ತರಣೆಯ ಯಾವುದೇ ಉಪಕ್ರಮವನ್ನು ಪಕ್ಷದ ಉನ್ನತ ನಾಯಕತ್ವವನ್ನು ಸಂಪರ್ಕಿಸಿದ ನಂತರ ತೆಗೆದುಕೊಳ್ಳಲಾಗುವುದು. ಇದೀಗ ನಾವು ವಿಧಾನ ಪರಿಷತ್ತಿನ ಚುನಾವಣೆ ಮತ್ತು ವಿಧಾನಮಂಡಲದ ಬೆಳಗಾವಿ ಅಧಿವೇಶನದ ಸಿದ್ದತೆಯಲ್ಲಿ ತೊಡಗಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ನಮ್ಮ ಹಿರಿಯ ನಾಯಕತ್ವದ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.