ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಿರುವ ಬಿಜೆಪಿ ಅದೆಷ್ಟು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಲೇವಡಿ ಮಾಡಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರಕಾರವೇ ಆಳ್ವೆಕೆಯಲ್ಲಿದೆ. ಆದರೂ ಅವರಿಗೆ ಸ್ವಂತ ಬಲದ ಮೇಲೆ ನಂಬಿಕೆ ಇಲ್ಲ. ಜೆಡಿಎಸ್ ಮೇಲೆ ಅವಲಂಬಿತವಾಗಲು ಮುಂದಾಗಿದೆ. ಇದು ಬಿಜೆಪಿ ಅಭ್ಯರ್ಥಿಗಳು ಸೋಲುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ ಬೇರೆ ಬೇಕಿಲ್ಲ ಎಂದು ಹೇಳಿದರು.
ರಾಷ್ಟ್ರೀಯ ಪಕ್ಷ ಬಿಜೆಪಿಗೆ ಇಂತಹ ಸ್ಥಿತಿ ಬರಬಾರದಿತ್ತು. ಬಿಜೆಪಿ ಮುಖಂಡ ಅರುಣ್ ಸಿಂಗ್ ಜೆಡಿಎಸ್ ಬಗ್ಗೆ ಬಾಯಿಗೆ ಬಂದಂತೆ ಮಾತಾಡಿದ್ದರು. ಜೆಡಿಎಸ್ ಬಿಜೆಪಿ ವಿರುದ್ಧ ಟೀಕೆ ಮಾಡಿತ್ತು. ಈಗ ಯಡಿಯೂರಪ್ಪ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಇದು ಬಿಜೆಪಿ ದುರ್ಬಲತೆ ತೋರಿಸುತ್ತದೆ ಎಂದು ಟೀಕಿಸಿದರು.
ಹೊಂದಾಣಿಕೆ ಕುರಿತು ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರು ಮಾತಾಡುತ್ತಿಲ್ಲ. ಯಡಿಯೂರಪ್ಪ ಮಾತ್ರ ಮಾತನಾಡುತ್ತಾರೆ. ಬಿಜೆಪಿಯವರು ಜೆಡಿಎಸ್ ಗೆ ಓಟ್ ಹಾಕ್ತಾರೆಯೇ ಎಂದು ಪ್ರಶ್ನಿಸಿದರು.

ಬಿಜೆಪಿ ಈಗ ಗೊಂದಲದ ಗೂಡಾಗಿದೆ. ಕೋಲಾರದಲ್ಲಿ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಮನೆ, ಮನೆಗೂ ವೋಟು ಕೇಳಿಕೊಂಡು ತಿರುಗುತ್ತಿದ್ದಾರೆ. ಹಾಗಾದರೆ ಯಡಿಯೂರಪ್ಪನವರ ಮಾತಿಗೆಲ್ಲಿದೆ ಬೆಲೆ. ಇಲ್ಲಿ ಬಿಜೆಪಿಗೆ ಬಿಟ್ಟುಕೊಟ್ಟರೆ ಜೆಡಿಎಸ್ ನೆಲೆ ಕಳೆದುಕೊಳ್ಳುತ್ತದೆ. ಚಿಕ್ಕಬಳ್ಳಾಪುರದಲ್ಲಿ ವೋಟ್ ವರ್ಗಾವಣೆ ಮಾಡಿದ್ರೆ ಅಸೆಂಬ್ಲಿಯಲ್ಲಿ ಮರ್ಯಾದೆ ಹೋಗುತ್ತದೆ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್. ರವಿ ಪರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೊಸಕೋಟೆಯಲ್ಲಿ ಮಂಗಳವಾರ ಪ್ರಚಾರ ಭಾಷಣ ಮಾಡಿದರು. ಮಾಜಿ ಸಿಎಂ ವೀರಪ್ಪ ಮೊಯ್ಲಿ, ಶಾಸಕ ಶರತ್ ಬಚ್ಚೇಗೌಡ, ಮೇಲ್ಮನೆ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಅಭ್ಯರ್ಥಿ ಎಸ್. ರವಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಶಾಮಣ್ಣ ಇದ್ದರು.


