ಕನಿಷ್ಟ ಬೆಂಬಲ ಬೆಲೆಗೆ ಕಾನೂನು ಖಾತರಿ, ರೈತರ ಮೇಲಿನ ದಾಖಲಿಸಿರುವ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದು ಸೇರಿ ಇತರೆ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವ ಕೇಂದ್ರದ ಪ್ರಸ್ತಾವದ ಕುರಿತು ಸಂಯುಕ್ತ ಕಿಸಾನ್ ಮೋರ್ಚ್ ಚರ್ಚೆ ನಡೆಸುತ್ತಿದ್ದು, ಸಂಧಾನ ಯಶಸ್ವಿಯಾದರೆ ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ಕೈಬಿಡುವ ಸಾಧ್ಯತೆ ಇದೆ ಎಂದು ಎನ್.ಡಿ.ಟಿವಿ ವರದಿ ಮಾಡಿದೆ.
ಸಂಯುಕ್ತ ಕಿಸಾನ್ ಮೋರ್ಚಾದ ರೈತ ಮುಖಂಡರು ಮಂಗಳವಾರ ಸಂಜೆ ಸುದೀರ್ಘ ಸಭೆ ನಡೆಸಿದ್ದು ಕೇಂದ್ರದ ಪ್ರಸ್ತಾಪವನ್ನು ಪರಿಗಣಿಸಲು ಹೇಗೆ ಮುಂದುವರಿಯಬೇಕು ಎಂಬ ಬಗ್ಗೆ ಚರ್ಚೆ ನಡೆಸಿದ್ದು, ರೈತರು ಯಾವುದೇ ಒಪ್ಪಂದಕ್ಕೆ ಬಂದಿಲ್ಲಮ ಆದರೆ ಮತ್ತೆ ನಾಳೆ ಮಧ್ಯಾಹ್ನ 2ಗಂಟೆಗೆ ಸಭೆ ಪುನರಾರಂಭವಾಗಲಿದೆ.
ಈಗಾಗಲೇ ವಿವಾದ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಆದರೂ ರೈತರು ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರಿಸಿದ್ದು ಕನಿಷ್ಟ ಬೆಂಬಲ ಬೆಲೆಗೆ ಕಾನೂನುಬದ್ದ ಖಾತ್ರಿ ನೀಡಲು ಕೇಂದ್ರ ಸಮಿತಿ ರಚಿಸಲಿದೆ ಎಂದು ಮೂಲಗಳು ತಿಳಿಸಿವೆ.
ಸಮಿತಿಯು ಸರ್ಕಾರಿ ಅಧಿಕಾರಿಗಳು, ಕೃಷಿ ತಜ್ಞರು ಮತ್ತು ಪ್ರತಿಭಟನೆ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿನಿಧಿಗಳು ಒಳಗೊಂಡಿರುತ್ತದೆ ಎಂದು ಹೇಳಲಾಗಿದೆ.
ಪ್ರತಿಭಟನಾನಿರತ ರೈತರ ಮೇಲೆ ಹಾಕಿರುವ ಎಲ್ಲಾ ಪ್ರಕರಣಗಳನ್ನು ಕೈಬಿಡಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಆದರೆ ಪ್ರಕಣಗಳನ್ನು ಕೈಬಿಡುವ ಮೊದಲು ರೈತರು ಪ್ರತಿಭಟನೆ ನಿಲ್ಲಿಸಬೇಕು ಎಂದು ಕೇಂದ್ರ ಹೇಳಿದೆ ಎಂದು ಮೂಲಗಳು ತಿಳಿಸಿವೆ.
ಗೃಹ ಸಚಿವ ಅಮಿತ್ ಶಾ ಬಾಕಿ ಇರುವ ಸಮಸ್ಯೆಗಳನ್ನು ಚರ್ಚಿಸಲು ಸಿದ್ದ ಎಂದು ಹೇಳಿದರು. ಎಂಎಸ್ಪಿ ಕಾನೂನು ಬದ್ಧಗೊಳಿಸುವ ಮತ್ತು ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ನೀಡಿದ್ದ ಗಡುವು ಇಂದಿಗೆ ಮುಕ್ತಾಯವಾಗಿದೆ. ಒಂದು ವೇಳೆ ರಾಜಿ ಕಂಡುಬಂದರೆ, ರೈತರು ಪ್ರತಿಭಟನೆ ಹಿಂತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಯುಧ್ವೀರ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಎನ್.ಡಿ.ಟಿವಿ ವರದಿ ಮಾಡಿದೆ.


