ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ತುಮಕೂರು ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಮಾಜಿ ಶಾಸಕ ಕೆ.ಎನ್.ಆರ್ ಪುತ್ರ ಆರ್. ರಾಜೇಂದ್ರ ಜಯ ಗಳಿಸಿದ್ದಾರೆ. ಮೊದಲನೇ ಪ್ರಾಶಸ್ತ್ಯ ಮತದಲ್ಲಿ ಹೆಚ್ಚು ಮತಗಳನ್ನು ಪಡೆದರೂ ಗೆಲುವಿನ ದಡ ಸೇರಲು ಎರಡನೇ ಪ್ರಾಶಸ್ತ್ಯದ ಮತಗಳನ್ನು ಅವಲಂಬಿಸಬೇಕಾಯಿತು.
ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ರಾಜೇಂದ್ರ ಸೋಲುತ್ತಾರೆಂಬ ಚರ್ಚೆ ನಡುವೆಯೂ ಬಿಜೆಪಿ ಅಭ್ಯರ್ಥಿಗಿಂತ 499 ಮತಗಳ ಅಂತರದಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಮೊದಲ ಪ್ರಾಶಸ್ತ್ಯದ ಮತಗಳಲ್ಲೂ ಆರ್. ರಾಜೇಂದ್ರ ಮುನ್ನಡೆದರು. ಪ್ರತಿ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡೇ ಬಂದರು. ಹಾಗಾಗಿ ಎರಡನೆ ಪ್ರಾಶಸ್ತ್ಯದ ಮತಗಳಲ್ಲಿ ಆರ್.ರಾಜೇಂದ್ರ ಆಯ್ಕೆಯಾಗಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಆಡಳಿತಾರೂಢ ಬಿಜೆಪಿ ಓರ್ವ ಸಚಿವರು ಸೇರಿದಂತೆ ಐವರು ಶಾಸಕರನ್ನು ಹೊಂದಿದ್ದರೂ ತನ್ನ ಅಭ್ಯರ್ಥಿ ಲೋಕೇಶ್ ಗೌಡ ಅವರನ್ನು ಗೆಲ್ಲಿಸಿಕೊಳ್ಳುವಲ್ಲಿ ವಿಫಲವಾಗಿದೆ. ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಇದು ತೀವ್ರ ಹಿನ್ನಡೆಯಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಆರ್. ರಾಜೇಂದ್ರ 2250 ಮತಗಳನ್ನು ಪಡೆದು ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರೆ, ಬಿಜೆಪಿಯ ಲೋಕೇಶ್ ಗೌಡ 1751 ಮತ ಗಳಿಸಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಅನಿಲ್ ಕುಮಾರ್ 1296 ಮತಗಳನ್ನು ಪಡೆಯಲು ಶಕ್ತರಾಗಿದ್ದಾರೆ.
ಬಿಜೆಪಿಯ ಆಂತರಿಕ ಜಗಳ ಮತ್ತು ಜೆಡಿಎಸ್ ನ ಮನೆಯೊಂದು ಹಲವು ಬಾಗಿಲು ಎನ್ನುವ ಒಡಕಿನ ಲಾಭವನ್ನು ಕಾಂಗ್ರೆಸ್ ಸಮರ್ಥವಾಗಿ ಬಳಸಿಕೊಂಡಿರುವುದು ಈ ಫಲಿತಾಂಶದಿಂದ ವ್ಯಕ್ತವಾಗಿದೆ.

ಆರ್. ರಾಜೇಂದ್ರ ಗೆಲ್ಲುವ ಸೂಚನೆಗಳು ದೊರೆಯುತ್ತಿದ್ದಂತೆಯೇ ಪ್ರತಿಯೊಂದು ತಾಲ್ಲೂಕಿನಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮ ಆಚರಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಹರ್ಷೋದ್ಗಾರ ವ್ಯಕ್ತಪಡಿಸಿದರು.
ಆದರೆ ಜಿಲ್ಲೆಯಲ್ಲಿ ಕೆಎನ್ಆರ್ ಪ್ರಾಬಲ್ಯವನ್ನು ಮುರಿಯುವ ತಂತ್ರಗಳು ವಿಫಲಗೊಂಡಿವೆ. ಜೆಡಿಎಸ್ ವರಿಷ್ಠರಿಗೆ ಮುಖಭಂಗವಾಗಿದೆ. ನಿಷ್ಠಾವಂತ ಜೆಡಿಎಸ್ ಕಾರ್ಯಕರ್ತರು ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿಗೆ ಹಿಡಿಶಾಪ ಹಾಕುತ್ತಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೋಲಿಗೆ ವರಿಷ್ಠರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


