ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಮಾಡುವುದು ಸೇರಿ ದೀರ್ಘಾವಧಿಯ ಚುನಾವಣಾ ಸುಧಾರಣೆಗಳನ್ನು ಜಾರಿಗೆ ತರುವ ಗುರಿಯನ್ನು ಹೊಂದಿರುವ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಗದ್ದಲದ ನಡುವೆ ಅಂಗೀಕರಿಸಲಾಯಿತು.
ಪ್ರತಿಪಕ್ಷಗಳ ಸದಸ್ಯರು ಮಸೂದೆಯನ್ನು ಬಲವಾಗಿ ವಿರೋಧಿಸಿದರು ಮತ್ತು ಆ ಮಸೂದೆಯನ್ನು ಹಿಂಪಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹಾಕಿದರು.
ಪ್ರತಿಪಕ್ಷಗಳ ಸದಸ್ಯರು ಸಭಾಧ್ಯಕ್ಷರ ಮುಂದಿನ ಬಾವಿಗೆ ಇಳಿದು ಮಸೂದೆಯ ವಿರುದ್ಧ ಘೋಷಣೆ ಕೂಗಿದರು. ಇದರ ನಡುವೆಯೇ ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು.
ಮಸೂದೆಯನ್ನು ಮಂಡಿಸುವುದನ್ನು ವಿರೋಧಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆಯನ್ನು ಮಂಡಿಸುವುದನ್ನು ವಿರೋಧಿಸುತ್ತೇನೆ ಎಂದು ಹೇಳಿದರು.
ಇದು ಸರ್ವೋಚ್ಚ ನ್ಯಾಯಾಲಯ ಪ್ರತಿಪಾದಿಸಿರುವ ಖಾಸಗಿತನದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂಬ ಅಂಶವನ್ನು ಪರಿಶೀಲನೆಗೆ ಒಳಪಡಿಸಲಾಗಿದೆ. ಇದು ಸಾಮೂಹಿಕ ಅಮಾನ್ಯೀಕರಣಕ್ಕೆ ಕಾರಣವಾಗುತ್ತದೆ. ಹಾಗಾಗಿ ಈ ವಿಧೇಯಕವನ್ನು ಸ್ಥಾಯಿ ಸಮಿತಿಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ತಿವಾರಿ ಮಾತನಾಡಿ ಆಧಾರ್ ಕಾಯ್ದೆಯು ಮತದಾರರ ಪಟ್ಟಿಯೊಂದಿಗೆ ಆಧಾರ್ ಅನ್ನು ಲಿಂಕ್ ಮಾಡಲು ಅನುಮತಿಸುವುದಿಲ್ಲ. ಆಧಾರ್ ಕಾಯಿದೆ ಬಹಳ ಸ್ಪಷ್ಟವಾಗಿದೆ. ಇದು ಹಣಕಾಸು ಮತ್ತು ಇತರ ಸಬ್ಸಿಡಿ ಪ್ರಯೋಜನಗಳು ಮತ್ತು ಸೇವೆಗಳ ಉದ್ದೇಶಿತ ವಿತರಣೆಗಾಗಿ ಕಾಯಿದೆ ಎಂದರು.
ಮತದಾನ ಕಾನೂನುಬದ್ಧ ಹಕ್ಕು. ಆದ್ದರಿಂದ, ಆಧಾರ್ ಕಾಯಿದೆ ಈ ಮಸೂದೆಯ ಶಾಸಕಾಂಗ ಸಾಮರ್ಥ್ಯ ಮೀರಿದೆ. ಆದ್ದರಿಂದ, ಈ ಮಸೂದೆಯನ್ನು ಮಂಡಿಸುವುದನ್ನು ವಿರೋಧಿಸುತ್ತೇವೆ ಎಂದು ತಿವಾರಿ ಹೇಳಿದರು.


