ಬಿಜೆಪಿ ಸರ್ಕಾರದ ಅಲಕ್ಷ್ಯ ಧೋರಣೆಯಿಂದಾಗಿ ಉತ್ತರ ಕರ್ನಾಟಕ ಜನರಿಗೆ ಸುವರ್ಣಸೌಧ ನಿರ್ಮಾಣ ಮಾಡಿ ನ್ಯಾಯ ಒದಗಿಸುವ ಉದ್ದೇಶ ಈಡೇರುತ್ತಿಲ್ಲ. ಇದು ಉತ್ತರ ಕರ್ನಾಟಕ ವಿರೋಧಿ ಸರ್ಕಾರವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಡಾ. ನಂಜುಂಡಪ್ಪ ಅವರ ವರದಿಯಂತೆ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ ಎಂಟು ವರ್ಷಗಳಲ್ಲಿ 31 ಸಾವಿರ ಕೋಟಿ ರೂ ಹಣ ಖರ್ಚು ಮಾಡುವಂತೆ ಶಿಫಾರಸು ಮಾಡಿತು. ನಾನು ಮುಖ್ಯಮಂತ್ರಿ ಆಗಿದ್ದಾಗ ಅವಧಿ ಮುಗಿದರೂ ಮತ್ತೆ ಐದು ವರ್ಷ ಮುಂದುವರೆಸಬೇಕೆಂದು ಆದೇಶಿಸಿ ವಾರ್ಷಿಕ 3 ಸಾವಿರ ಕೋಟಿ ರೂ ಅನುದಾನ ನೀಡಿದ್ದೆ ಎಂದು ಸ್ಮರಿಸಿದ್ದಾರೆ.
ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಅನುಕೂಲವಾಗುವಂತೆ ಸಂವಿಧಾನ ತಿದ್ದುಪಡಿ ಮಾಡಿ 317 (ಜೆ) ಕಲಂನಡಿ ವಿಶೇಷ ಸ್ಥಾನಮಾನ ನೀಡುವಂತೆ ಆಗಿನ ಎನ್.ಡಿ.ಎ ಸರ್ಕಾರಕ್ಕೆ ಪತ್ರ ಬರೆದರೆ ಅಂದಿನ ಗೃಹ ಸಚಿವ ಅಡ್ವಾಣಿ ಅವರು ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ನಿಷ್ಠೂರವಾಗಿ ಹೇಳಿರುವುದನ್ನು ಉತ್ತರಕರ್ನಾಟಕದ ಜನ ಮರೆತಿಲ್ಲ ಎಂದು ಹೇಳಿದ್ದಾರೆ.
2013ರಲ್ಲಿ ನಾನು ಯುಪಿಎ ಸರ್ಕಾರಕ್ಕೆ ಮಾಡಿದ ಮನವಿಗೆ ಸ್ಪಂದಿಸಿದ ಪ್ರಧಾನಿ ಮನಮೋಹನ್ ಸಿಂಗ್ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಿದರು. ಅನುದಾನವೂ ಬಿಡುಗಡೆಯಾಯಿತು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಹೈದರಾಬಾದ್ ಕರ್ನಾಟಕದ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದರು. ಆದರೆ ಅನುದಾನ ಮಾತ್ರ ಬಿಡುಗಡೆ ಆಗಿಲ್ಲ ಎಂದು ದೂರಿದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಎರಡೂವರೆ ವರ್ಷದಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸದಸ್ಯರು ಅಧ್ಯಕ್ಷರ ನೇಮಕ ಮಾಡಿಲ್ಲ. ಹೀಗಿದ್ದಾಗ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆದು ಅನುದಾನದ ಸದ್ಬಳಕೆಯಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಸರ್ಕಾರ 2021-22ನೇ ಸಾಲಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 1500 ಕೋಟಿ ಅನುದಾನ ಘೋಷಿಸಿತು. ಆದರೆ ಬಿಡುಗಡೆ ಮಾಡಿದ್ದು ಮಾತ್ರ 387 ಕೋಟಿ ರೂ. ಇನ್ನುಳಿದ ಹಣ ಯಾವಾಗ ಬಿಡುಗಡೆ ಮಾಡುತ್ತಾರೆ ಎಂದರು.
ನಾವು ಅಧಿಕಾರಕ್ಕೆ ಬಂದರೆ ಕೃಷ್ಣ ಹಾಗೂ ಕಾವೇರಿ ನದಿ ಕಣಿವೆ ಪ್ರದೇಶದ ನೀರಾವರಿ ಯೋಜನೆಗಳಿಗೆ ವಾರ್ಷಿಕ 10 ಸಾವಿರ ಕೋಟಿ ಅನುದಾನ ನೀಡುತ್ತೇವೆ ಎಂಬ ಭರವಸೆ ನೀಡಿದೆವು. ಐದು ವರ್ಷದ ಅವಧಿಯಲ್ಲಿ 52,000 ಕೋಟಿ ಹಣ ನೀರಾವರಿ ಉದ್ದೇಶಕ್ಕಾಗಿ ಖರ್ಚು ಮಾಡಿದ್ದೇವೆ ಎಂದು ಹೇಳಿದರು.
ಬಿಜೆಪಿ ಸರ್ಕಾರ 2008 ರಿಂದ 2013 ರ ವರೆಗೆ ನೀರಾವರಿ ಉದ್ದೇಶಕ್ಕಾಗಿ ಖರ್ಚು ಮಾಡಿರುವ ಅನುದಾನ 17,734 ಕೋಟಿ. 2018ರಲ್ಲಿ ಸುಜಲಾಂ, ಸುಫಲಾಂ ಯೋಜನೆಯಡಿ 1.5 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕದ ಎಲ್ಲಾ ನೀರಾವರಿ ಯೋಜನೆ ಪೂರ್ಣಗೊಳಿಸುವ ಭರವಸೆ ನೀಡಿದರು. ಅದು ಭರವಸೆಯಾಗಿಯೇ ಉಳಿದಿದೆ ಎಂದು ಟೀಕಿಸಿದರು.
ಈ ಸರ್ಕಾರ ಹೇಳೋದೊಂದು, ಮಾಡೋದೊಂದು. ಬಿಜೆಪಿ ಕೊಟ್ಟ ಭರವಸೆ ಈಡೇರಿಸದ ವಚನ ಭ್ರಷ್ಟ ಸರ್ಕಾರ ಎಂದು ಆರೋಪಿಸಿದರು.


