ಉತ್ತರಾಖಂಡ್ ಸರ್ಕಾರದಲ್ಲಿ ಸಚಿವರಾಗಿರುವ ಹರಕ್ ಸಿಂಗ್ ರಾವ್ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದು, ವಿಧಾನಸಭೆ ಚುನಾವಣೆಗೂ ಮೊದಲೇ ಬಿಜೆಪಿಗೆ ಭಾರೀ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಅರಣ್ಯ, ಪರಿಸರ, ಕಾರ್ಮಿಕ ಹಾಗೂ ಉದ್ಯೋಗ ಖಾತೆಗಳನ್ನು ಹೊಂದಿರುವ ರಾವತ್, ಶುಕ್ರವಾರ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಿಂದ ಹೊರನಡೆದಿದ್ದಾರೆ. ಕೋಟ್ವಾರದಲ್ಲಿ ಪ್ರಸ್ತಾವಿತ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ರಾಜ್ಯ ಸರ್ಕಾರ ನಿಷ್ಕ್ರಿಯತೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಭೆಯಿಂದ ಹೊರನಡೆದರೆಂದು ಮೂಲಗಳು ತಿಳಿಸಿವೆ.
ಬಿಜೆಪಿ ರಾಜ್ಯಧ್ಯಕ್ಷ ಮದನ್ ಕೌಶಿಕ್, ರಾವತ್ ಅವರು ಮುಖ್ಯಮಂತ್ರಿ ವಿರುದ್ಧ ಕೋಪ ವ್ಯಕ್ತಪಡಿಸಿದರೂ ರಾಜಿನಾಮೆ ನೀಡಲಿಲ್ಲ. ಪಕ್ಷದಲ್ಲಿ ಏನೂ ಆಗಿಲ್ಲ. ಎಲ್ಲವೂ ಸರಿ ಇದೆ ಎಂದು ಹೇಳಿದ್ದಾರೆ.
ರಾವತ್ ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದರೂ ಅವರಿಂದ ಯಾವುದೇ ರಾಜಿನಾಮೆ ಪತ್ರ ಬಂದಿಲ್ಲ ಎಂದು ರಾಜ್ಯ ಸರ್ಕಾರದ ವಕ್ತಾರ ಸುಬೋಧ್ ಉನಿಯಾಲ್ ಹೇಳಿಕೆ ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ರಾವತ್ ಅವರ ಬೆದರಿಕೆ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ಗೆ ಮರಳಬಹುದು ಎಂಬ ಊಹಾಪೋಹಗಳು ಎದ್ದಿವೆ. ಇಬ್ಬರು ಮುಖ್ಯಮಂತ್ರಿಗಳನ್ನು ಬದಲಾಯಿಸಿರುವ ಬಿಜೆಪಿಗೆ ಈ ಬೆಳವಣಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.


