ರಾಜ್ಯದ ಜನರ ಆಸ್ತಿಯಾಗಿರುವ ದೇವಾಲಯಗಳನ್ನು ರಾಜ್ಯ ಸರ್ಕಾರ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರಿಗೆ ಹಸ್ತಾಂತರ ಮಾಡಲು ಮುಂದಾಗಿದ್ದು, ಇದನ್ನು ಜನ ಹಾಗೂ ದೇವರು ಬಿಜೆಪಿಯನ್ನು ಕ್ಷಮಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಬಿಜೆಪಿ ಸರ್ಕಾರ ಸುಟ್ಟು ಭಸ್ಮವಾಗಲಿದೆ. ಕಾಂಗ್ರೆಸ್ ಹಿಂದೂ ವಿರೋಧಿಯಲ್ಲ, ಬಿಜೆಪಿ ನಿಜವಾದ ಹಿಂದೂ ವಿರೋಧಿ ಎಂದು ಕಿಡಿ ಕಾರಿದರು.
ರಾಜ್ಯದಲ್ಲಿ ಒಂದೆರಡು ದೇವಾಲಯಗಳು, ಮಠಗಳನ್ನು ಬಿಟ್ಟರೆ ಉಳಿದೆಲ್ಲವೂ ಸರ್ಕಾರದ ನಿಯಂತ್ರಣದಲ್ಲಿದೆ. ನಿತ್ಯವೂ ಜನರು ದೇವಾಲಯಗಳ ಹುಂಡಿಗೆ ಕೋಟ್ಯತರ ರೂಪಾಯಿ ಹಾಕುತ್ತಾರೆ. ಇದನ್ನು ತಮ್ಮ ಕಾರ್ಯಕರ್ತರಿಗೆ ಹಂಚಲು ಬಿಜೆಪಿ ಸರ್ಕಾರ ಹೊರಟಿದೆ ಎಂದು ದೂರಿದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನಪರವಾದ ಒಂದು ಯೋಜನೆ ನೀಡಲಿಲ್ಲ. ಈಗ ಚುನಾವಣೆಯಲ್ಲಿ ಸೋಲುತ್ತಿದ್ದೇವೆ ಎಂಬ ಕಾರಣಕ್ಕೆ ಗೋಹತ್ಯೆ, ಮತಾಂತರ ನಿಷೇಧ, ದೇವಾಲಯಗಳ ಸ್ವಾಯತ್ತತೆ ಕಾನೂನು ತರುತ್ತಿದ್ದಾರೆ. ಚುನಾವಣೆ ಸೋಲನ್ನು ಮರೆಮಾಚಲು, ಜನರನ್ನು ಭಾವನಾತ್ಮಕವಾಗಿ ಹಿಡಿದಿಡಲು ಪ್ರಯತ್ನಿಸುತ್ತಿದ್ದು, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ ಎಂದರು.
ದೇವರು, ದೇವಾಲಯಗಳನ್ನೇ ಮಾರಲು ಹೋರಟಿರುವ ನೀವು ಎಂತಹ ಕ್ರೂರ ಕೃತ್ಯಕ್ಕೆ ಕೈ ಹಾಕಿದ್ದೀರಿ. ಮುಂದಿನ ತಿಂಗಳು 4 ರಂದು ನಾವು ಪಕ್ಷದ ನಾಯಕರ ಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ಮಾಡಿ ಒಮ್ಮತದ ನಿರ್ಧಾರಕ್ಕೆ ಬರುತ್ತೇವೆ ಎಂದು ಹೇಳಿದರು.
ಶಿಕ್ಷಣ ಸಂಸ್ಥೆಗಳ ಹೆಸರಲ್ಲಿ ಕೋಟ್ಯಂತರ ರೂಪಾಯಿಯನ್ನು ಸರ್ಕಾರ ಸಂಘ ಪರಿವಾರದವರಿಗೆ ನೀಡಿದೆ. ಈಗ ದೇವಾಲಯಗಳನ್ನು ಹಸ್ತಾಂತರಿಸುತ್ತಿದ್ದು ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಹಿತಾಸಕ್ತಿ ವಿರುದ್ಧ ಮತ್ತು ಜನವಿರೋಧಿಯಾಗಿ ತೆಗೆದುಕೊಂಡಿರುವ ನಿರ್ಧಾರಗಳನ್ನು ವಾಪಸ್ ತೆಗೆದುಕೊಳ್ಳುತ್ತೇವೆ ಭರವಸೆ ನೀಡಿದರು.


