ಪಂಜಾಬ್ ಗೆ ಬುಧವಾರ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯ ಉಲ್ಲಂಘನೆಯ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಗೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂಕೋರ್ಟ್ ಜನವರಿ 7ರಂದು ಕೈಗೆತ್ತಿಕೊಳ್ಳಲಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠದ ಮುಂದೆ ಹಿರಿಯ ವಕೀಲ ಮಣಿಂದರ್ ಸಿಂಗ್ ಈ ವಿಷಯ ಪ್ರಸ್ತಾಪಸಿ ಅರ್ಜಿಯ ಪ್ರತಿಯನ್ನು ಪಂಜಾಬ್ ಸರ್ಕಾರ ನೀಡುವಂತೆ ಕೇಳಿದರು. ಹೀಗಾಗಿ ಸುಪ್ರೀಂಕೋರ್ಟ್ ನಾಳೆ ವಿಚಾರಣೆ ನಡೆಸುವುದಾಗಿ ಹೇಳಿತು.
ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು ಮತ್ತು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ವಕೀಲ ಸಿಂಗ್ ಪೀಠಕ್ಕೆ ಮನವಿ ಮಾಡಿದರು.
ಈ ವಿಷಯದಲ್ಲಿ ನ್ಯಾಯಾಲಯ ಏನು ಮಾಡಬೇಕು ಎಂದು ನೀವು ನಿರೀಕ್ಷಿಸುತ್ತೀರಿ ಎಂದು ಪೀಠವು ವಕೀಲರನ್ನು ಕೇಳಿತು.
ಆಗ ಇದೊಂದು ಗಂಭೀರ ಭದ್ರತಾ ಲೋಪವಾಗಿದೆ. ರಾಜ್ಯದಲ್ಲಿನ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ಬಂದೋಬಸ್ತ್ ನಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಯಾಗಬೇಕು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವ ಅಗತ್ಯ ಇದೆ ಎಂದು ಪೀಠದ ಗಮನ ಸೆಳೆದರು.


