ಕೊರೊನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟದ ಸಚಿವರಿಗೆ ಕೊವಿಡ್-ಜಿಲ್ಲಾ ಉಸ್ತುವಾರಿಗಳನ್ನಾಗಿ ಹಂಚಿಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಸಚಿವ ಜೆ.ಸಿ.ಮಾಧುಸ್ವಾಮಿ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದೆ.
ನಾಲ್ಕೈದು ಸಚಿವರಿಗೆ ಅವರ ಕ್ಷೇತ್ರಕ್ಕೆ ಸಮೀಪ ಇರುವ ಜಿಲ್ಲೆಗಳ ಉಸ್ತುವಾರಿ ಜೊತೆಗೆ ಕೊವಿಡ್ ಉಸ್ತುವಾರಿ ನೋಡಿಕೊಳ್ಳಲು ಉಸ್ತುವಾರಿಗಳನ್ನಾಗಿ ನೇಮಕ ಮಾಡಿದ್ದಾರೆ. ಈ ಹಿಂದೆ ಇದ್ದ ಆದೇಶಗಳನ್ನು ಮುಖ್ಯಮಂತ್ರಿಗಳು ರದ್ದುಪಡಿಸಿದ್ದಾರೆ.
ತುಮಕೂರು ಜಿಲ್ಲಾ ಉಸ್ತುವಾರಿಯಾಗಿದ್ದ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಯಾವುದೇ ಕೊವಿಡ್-ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡದೆ ಅವರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಬಿಜೆಪಿ ಸರ್ಕಾರವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದ ಜೆ.ಸಿ.ಮಾಧುಸ್ವಾಮಿ ಅವರನ್ನು ಯಾಕೆ ಕೈಬಿಡಲಾಗಿದೆ ಎಂದು ಯಕ್ಷಪ್ರಶ್ನೆಯಾಗಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಕೊಡಗು ಜಿಲ್ಲೆಯ ಕೊವಿಡ್-ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡಿದೆ.
ಮುಖ್ಯಮಂತ್ರಿಗಳು ಬೆಂಗಳೂರು ನಗರ ಜಿಲ್ಲೆಯ ಕೊವಿಡ್ ಮತ್ತು ಜಿಲ್ಲಾ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ. ಯಾವೊಬ್ಬ ಸಚಿವರಿಗೂ ಅವರದೇ ಜಿಲ್ಲೆಯ ಉಸ್ತುವಾರಿಯನ್ನಾಗಿ ಮಾಡಿಲ್ಲ.
ತುಮಕೂರು ಜಿಲ್ಲೆಗೆ ಸಚಿವ ಅರಗ ಜ್ಞಾನೇಂದ್ರ ಅವರನ್ನು ಜಿಲ್ಲಾ ಮತ್ತು ಕೊವಿಡ್ ಉಸ್ತುವಾರಿಯ ಜವಾಬ್ದಾರಿ ವಹಿಸಲಾಗಿದೆ. ಕೆ.ಎಸ್. ಈಶ್ವರಪ್ಪ ಅವರಿಗೆ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ನೋಡಿಕೊಳ್ಳುವ ಜವಾಬ್ದಾರಿ ವಹಿಸಲಾಗಿದೆ.