ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಭಾರತೀಯ ಜನತಾ ಪಕ್ಷದ ಹೈಕಮಾಂಡ್ ಹೆಚ್ಚು ಕ್ರಿಯಾತ್ಮಕ ಮುಖವನ್ನು ತರುವ ಸಲುವಾಗಿ ಮುಖ್ಯಮಂತ್ರಿಯನ್ನು ಬದಲಾಯಿಸಲು ಚಿಂತನೆ ನಡೆಸಿದೆ ಎಂದು ಡೆಕನ್ ಕ್ರಾನಿಕಲ್ ವರದಿ ಮಾಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯವೈಖರಿ ಬಗ್ಗೆ ಪಕ್ಷದ ಕೇಂದ್ರದ ಹೈಕಮಾಂಡ್ ತೃಪ್ತಿ ಹೊಂದಿಲ್ಲ ಎಂಬ ಬಗ್ಗೆ ಮೂಲಗಳನ್ನು ಉಲ್ಲೇಖಿಸಿ ಅದು ಸುದ್ದಿ ಪ್ರಕಟಿಸಿದೆ.
ಐದು ರಾಜ್ಯಗಳ ಚುನಾವಣೆಯಲ್ಲಿ ಪಕ್ಷ ನಿರತವಾಗಿರುವ ಕಾರಣ ಚುನಾವಣೆ ಮುಗಿದ ಬಳಿಕ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ತವರು ಹಾವೇರಿ ಜಿಲ್ಲೆಯ ಹಾನಗಲ್ ಸೇರಿದಂತೆ ಉಪಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸೋಲಿನ ಬಗ್ಗೆ ಬಿಜೆಪಿ ಹೈಕಮಾಂಡ್ ಅತೃಪ್ತಿ ವ್ಯಕ್ತಪಡಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕನ್ ಕ್ರಾನಿಕಲ್ ವರದಿ ಮಾಡಿದೆ.
2023ರ ವಿಧಾನಸಭಾ ಚುನಾವಣೆಯ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಮನಗಂಡಿರುವ ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡುವ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ.
ಇದರ ಜೊತೆಗೆ ರಾಜ್ಯದ ಹಲವು ಹಿರಿಯ-ಕಿರಿಯ ಸಚಿವರು ಮತ್ತು ಶಾಸಕರು ಮುಖ್ಯಮಂತ್ರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದು ಬಿಜೆಪಿ ಹೈಕಮಾಂಡ್ ಚಿಂತಗೀಡುಮಾಡಿದೆ.
ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮೊದಲೇ ಬಿಜೆಪಿ ಹೈಕಮಾಂಡ್ ಯುವ ಮುಖವನ್ನು ಆಯ್ಕೆ ಮಾಡುವ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ.
ಹೊಸ ಮುಖ ರಾಜಕೀಯವಾಗಿ ಪ್ರಭಾವಿ ಪಂಚಮಸಾಲಿ ಲಿಂಗಾಯತ ಸಮುದಾಯದವರಾಗಿರಬಹುದು. ಇಲ್ಲವೇ ಮುಖ್ಯಮಂತ್ರಿ ಸ್ಥಾನಕ್ಕಾಗಿ ದಲಿತ ಮುಖವನ್ನು ಪಕ್ಷ ಮುಂದಿಡಬಹುದು ಎಂಬ ಬಗ್ಗೆ ವಿಶ್ಲೇಷಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆದಿದ್ದು, ಹಿರಿಯ ಸಚಿವರಾದ ಕೆ.ಎಸ್.ಈಶ್ವರಪ್ಪ, ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ್, ಪ್ರಭುಚೌಹಾಣ್ ಅವರನ್ನು ಕೈಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ರಾಜ್ಯ ಘಟಕವನ್ನು ಬಲಪಡಿಸುವ ಸಲುವಾಗಿ ಹೈಕಮಾಂಡ್ ಮೊದಲು ಮುಖ್ಯಮಂತ್ರಿ ಬದಲಾಯಿಸಬಹುದು. ನಂತರ ಸಚಿವ ಸಂಪುಟವನ್ನು ಪುನಾರಚನೆ ಮಾಡಬಹುದು ಎಂದು ಬಿಜೆಪಿ ಉನ್ನತ ಮೂಲಗಳನ್ನು ಉಲ್ಲೇಖಿಸಿ ಡೆಕನ್ ಕ್ರಾನಿಕಲ್ ತಿಳಿಸಿದೆ.


