ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಕಾಂಗ್ರೆಸ್ ನಿಯೋಗ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮುಂದಿನ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿಯಿಂದಲೇ ಸ್ಪರ್ಧಿಸುವಂತೆ ಮನವಿ ಮಾಡಿದೆ.
ಜಿಲ್ಲಾ ಪಂಚಾಯತ್ ಸದಸ್ಯ ವೈ.ಸಿ.ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ನೀಡಿದ ಕಾಂಗ್ರೆಸ್ ನಿಯೋಗ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿದರೆ ಗೆಲ್ಲುವುದು ಸುಲಭವಾಗುತ್ತದೆ ಎಂದು ಮನವರಿಕೆ ಮಾಡಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ ನಿಯೋಗ, 2013-18ರ ವರೆಗೂ ತಾವು ಮಂಡಿಸಿದ ಆಯ-ವ್ಯಯದ ಮೂಲಕ ಅನ್ನಭಾಗ್ಯ ಯೋಜನೆ ಜಾರಿಗೆ ತಂದು ತುತ್ತು ಅನ್ನಕ್ಕಾಗಿ ಸಾಕಷ್ಟು ಶ್ರಮ ವಹಿಸುತ್ತಿದ್ದ ಕಡುಬಡಕುಟುಂಬಗಳ ಹಸಿವನ್ನು ನೀಗುವಂತೆ ಮಾಡಿದ್ದೀರಿ.
ಜಾತಿಬೇಧವಿಲ್ಲದ ಎಲ್ಲಾ ವರ್ಗದವರಿಗೂ ಅನ್ನಭಾಗ್ಯ ಯೋಜನೆಯಿಂದ ಬಡವರಿಗೆ ಸಹಾಯವಾಗಿದೆ. ರಾಜ್ಯ ಕಂಡ ಹಿಂದುಳಿದ ವರ್ಗಗಳ ನೇತಾರ ದಿವಂಗತ ಎಸ್. ಬಂಗಾರಪ್ಪ ನಂತರ ತಾವೇ ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ, ದೀನದಲಿತರಿಗೆ ನೆರವು ನೀಡಿದ್ದೀರಿ. ಹಾಗಾಗಿ ಚಿಕ್ಕನಾಯಕನಹಳ್ಳಿಯಿಂದ ಸ್ಪರ್ಧಿಸಬೇಕು ಎಂದು ಮನವಿಯಲ್ಲಿ ಹೇಳಲಾಗಿದೆ.

ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ಗೆ ತೀವ್ರ ಹಿನ್ನಡೆಯಾಗಲಿದೆ. ಜೊತೆಗೆ ಹಾಸನ, ಚಿತ್ರದುರ್ಗ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನಿರ್ಣಾಯಕ ಅಚ್ಚರಿ ಫಲಿತಾಂಶ ನಿರೀಕ್ಷಿಸಬಹುದಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದೆ.
ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಕುರುಬ, ಯಾದವ, ಮುಸ್ಲೀಂ, ನಾಯಕ, ದೀನದಲಿತರ ಮತಗಳು ನಿರ್ಣಾಯಕವಾಗಲಿವೆ. ಆದ್ದರಿಂದ ಇಲ್ಲಿ ಸ್ಪರ್ಧಿಸಿದರೆ ತಾವು ಪ್ರಚಂಡ ಗೆಲುವು ಸಾಧಿಸುತ್ತೀರಿ. ಕ್ಷೇತ್ರದ ಮತದಾರರು ಕೂಡ ನಿಮ್ಮ ಬರುವಿಕೆಯನ್ನು ನಿರೀಕ್ಷಿಸುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಭವಿಷ್ಯಕ್ಕೆ ಕಾರಣವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ವೈ.ಸಿ.ಸಿದ್ದರಾಮಯ್ಯ ನೇತೃತ್ವದ ನಿಯೋಗ ಮನವಿ ಮಾಡಿದೆ.


