ಕೊರೊನ ಪರಿಸ್ಥಿತಿ ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ವಾರಾಂತ್ಯದ ಕರ್ಪ್ಯೂ ಮತ್ತು ಅಂಗಡಿಗಳನ್ನು ತೆರೆಯುವ ಸಮ-ಬೆಸ ವ್ಯವಸ್ಥೆಯನ್ನು ತೆಗೆದು ಹಾಕಲು ತೀರ್ಮಾನಿಸಿದೆ.
ಅಲ್ಲದೆ ರೆಸ್ಟೋರೆಂಟ್ ಗಳು ಮತ್ತು ಬಾರ್ ಗಳನ್ನು ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ತೆರೆಯಲು ಪುನಃ ಅನುಮತಿ ನೀಡಿದೆ.
ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಆದರೂ ಮುಂದಿನ ಸಭೆಗೆ ಶಾಲೆಗಳನ್ನು ತೆರೆಯುವ ನಿರ್ಧಾರವನ್ನು ಮುಂದೂಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶೇಕಡ 50ರಷ್ಟು ಸಿಬ್ಬಂದಿಯೊಂದಿಎ ಸರ್ಕಾರಿ ಕಚೇರಿಗಳನ್ನು ತೆರೆಯಲು ಸಹ ಅನುಮತಿ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಭೆಯಲ್ಲಿ ಬಹಿರಂಗ ಸಭೆಗಳಲ್ಲಿ ಗರಿಷ್ಟ 200 ಅತಿಥಿಗಳು ಮತ್ತು ಒಳಾಂಗಣ ಸ್ಥಳದಲ್ಲಿ ಶೇ.50ರಷ್ಟು ಸಾಮರ್ಥ್ಯವಿರುವ ವಿವಾಹ ಸಮಾರಂಭಗಳನ್ನು ಮಾಡಲು ಅನುಮತಿ ನೀಡಲಾಗಿದೆ. ಈವರೆಗೆ ಮನೆಯಲ್ಲಿ ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇವಲ 20 ಜನರಿಗೆ ಮಾತ್ರ ಅವಕಾಶ ಇತ್ತು.
ವಾರದ ದಿನಗಳಲ್ಲಿ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಲಾದ ರಾತ್ರಿ ಕರ್ಪ್ಯೂ ಮುಂದುವರಿಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣಗಳ ಹೆಚ್ಚಳವನ್ನು ಪರಿಶೀಲಿಸಲು ಕೋವಿಡ್ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸಭೆಯಲ್ಲಿ ನಿರ್ಧರಿಸಿದೆ ಎಂದು ಹೇಳಿದರು.


