ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಅಪಮಾನ ಮಾಡುವ ಮೂಲಕ ಧ್ವಜಾರೋಹಣ ನೆರವೇರಿಸಿದ ರಾಯಚೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ದೇಶದ ಜನರ ಕ್ಷಮೆ ಯಾಚಿಸಬೇಕೆಂದು ರಾಜ್ಯದೆಲ್ಲೆಡೆ ದಲಿತ-ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಒತ್ತಾಯಿಸಿವೆ.
ಅಂಬೇಡ್ಕರ್ ಈ ದೇಶಕ್ಕೆ ಸಂವಿಧಾನವನ್ನು ನೀಡಿ ಎಲ್ಲಾ ಸಮುದಾಯಗಳು ಸಮನಾಗಿ ಬದುಕು ಕಟ್ಟಿಕೊಳ್ಳಲು ಅವಕಾಶ ನೀಡಿದ್ದಾರೆ. ಇಂತಹ ವ್ಯಕ್ತಿತ್ವವುಳ್ಳ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವುದರಿಂದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರು ಆಗ್ರಹಿಸಿದ್ದಾರೆ.
ಕೋಲಾರ, ಬೆಂಗಳೂರು, ರಾಯಚೂರು ಹೀಗೆ ಎಲ್ಲಾ ಜಿಲ್ಲೆಗಳಲ್ಲೂ ದಲಿತ ಸಂಘಟನೆಗಳು, ರೈತ ಸಂಘಟನೆಗಳು ಮತ್ತು ಪ್ರಗತಿಪರ ಸಂಘಟನೆಗಳು ಒಂದೆಡೆ ಸೇರಿ ಪ್ರತಿಭಟನೆ ನಡೆಸಿದ್ದು ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿವೆ.
ಸಾಮಾಜಿಕ ಜಾಲತಾಣದಲ್ಲಿ ನ್ಯಾಯಾಧೀಶರ ನಡೆಯ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಅದೂ ನ್ಯಾಯಾಧೀಶರಾಗುವ ಮೊದಲು ತೆಗೆದುಕೊಂಡ ಪ್ರತಿಜ್ಞಾವಿಧಿಗೆ ವಿರುದ್ಧವಾಗಿ ನಡೆದುಕೊಂಡು ಸಂವಿಧಾನ ಮತ್ತು ಅಂಬೇಡ್ಕರ್ ಅವರಿಗೆ ಅಗೌರವ ತೋರಿದ್ದಾರೆ ಎಂದು ಪ್ರತಿಭಟನಾ ನಿರತರು ಆರೋಪಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಅವರೇ ಸೋತರೇನಂತೆ ಬನ್ನಿ ಬೀದಿಗೆ ಬಂದು ಪ್ರತಿಭಟನೆ ನಡೆಸಿ, ಡಾ.ಜಿ.ಪರಮೇಶ್ವರ್ ಮುಂದೆ ಇನ್ನೆಂದೂ ಇಂತಹ ಅವಕಾಶ ಸಿಗುವುದಿಲ್ಲ. ಬನ್ನಿ ಪ್ರತಿಭಟನೆ ನಡೆಸಿ ಎಂದು ದಲಿತ ಮುಖಂಡರನ್ನು ಸಾಮಾಜಿಕ ಜಾಲತಾಣದಲ್ಲಿ ಕಾಲೆಳೆದಿದ್ದಾರೆ.
ಪ್ರತಿಭಟನಾಕಾರರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜನರಿಗೆ ನ್ಯಾಯ ಕೊಡಬೇಕಾದ ಉನ್ನತ ಸ್ಥಾನದಲ್ಲಿರುವ ನ್ಯಾಯಾಧೀಶರೇ ಜಾತಿಯ ಅಸಹನೆ ಹೊಂದಿರುವುದು ಆರೋಗ್ಯಕರ ಸಮಾಜದ ಲಕ್ಷಣವಲ್ಲ. ಹೀಗಾಗಿ ಅವರನ್ನು ಕೂಡಲೇ ಹುದ್ದೆಯಿಂದ ವಜಾ ಮಾಡಬೇಕು ಎಂದು ಅಗ್ರಹಿಸಿದರು.
ನ್ಯಾ.ಮಲ್ಲಿಕಾರ್ಜುನಗೌಡ ಅವರ ಮೇಲೆ ದೇಶದ್ರೋಹಿ ಪ್ರಕರಣ ದಾಖಲಿಸಬೇಕು ಹಾಗೂ ನ್ಯಾಯಾಧೀಶರನ್ನು ಬಂಧಿಸಬೇಕು’ ಎಂದು ಆಗ್ರಹಿಸಿದರು.
ಸಂವಿಧಾನ ಮತ್ತು ಕಾನೂನಿಗೆ ಮೂಲ ಪುರುಷ ಡಾ.ಬಿ.ಆರ್.ಅಂಬೇಡ್ಕರ್. ಆದರೆ, ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಈ ಬಗ್ಗೆ ಪರಿಜ್ಞಾನವಿಲ್ಲದೆ ಅವರ ಫೋಟೋ ತೆರವುಗೊಳಿಸಿಲ್ಲ. ಬದಲಿಗೆ ಉದ್ದೇಶಪೂರ್ವಕವಾಗಿಯೇ ಮಾಡಿದ್ದಾರೆ ಎಂಬುದು ಸ್ಪಷ್ಟ. ಹಾಗಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜೊತೆಗೆ ಸರ್ಕಾರ ಕೋರ್ಟ್ ಗಳಿಗೆ ಅಂಬೇಡ್ಕರ್ ಭಾವಚಿತ್ರ ಇಡುವ ಸಂಬಂಧ ಸ್ಪಷ್ಟ ಸೂಚನೆ ನೀಡಬೇಕು ಎಂದು ವೆಂಕಟೇಶ್ ಹೇಳಿಕೆಯನ್ನು ಉಲ್ಲೇಖಿಸಿ ವಾರ್ತಾಭಾರತಿ ವರದಿ ಮಾಡಿದೆ.