ವಿಧಾನ ಪರಿಷತ್ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಾಲ್ಕು ಕ್ಷೇತ್ರಗಳ ಪೈಕಿ ಈಗಾಗಲೇ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಶಿವಕುಮಾರ್, ಮಧು ಮಾದೇಗೌಡ ಹಾಗೂ ಧಾರವಾಡದ ಗುರಿಕಾರ್ ಹೆಸರುಗಳನ್ನು ಎಐಸಿಸಿ ಅಂತಿಮಗೊಳಿಸಿದೆ ಎಂದರು.
ಬೆಳಗಾವಿ, ಬಾಗಲಕೋಟೆ, ಬಾದಾಮಿ, ವಿಜಯಪುರದ ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರದ ತಲಾ ಒಬ್ಬ ಅಭ್ಯರ್ಥಿ ಆಯ್ಕೆ ಸಂಬಂಧ ನಾಯಕರ ಜೊತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಹೇಳಿದರು.
ಪದವೀಧರ ಕ್ಷೇತ್ರಕ್ಕೆ ಆರು ಮಂದಿ ಆರ್ಜಿ ಹಾಕಿದ್ದು ಶಿಕ್ಷಕರ ಕ್ಷೇತ್ರಕ್ಕೆ 15ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿರುವ ಹಿನ್ನೆಲೆಯಲ್ಲಿ ಎಲ್ಲರ ಅಭಿಪ್ರಾಯ ಪಡೆಯುವುದು ಮುಖ್ಯ. ಇಂದಿನ ಸಭೆಯಲ್ಲಿ ಎಲ್ಲರೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ ಎಂದು ವಿವರಿಸಿದರು.
ಕೆಲವು ನಾಯಕರು ಗೋವಾ ಚುನಾವಣಾ ಪ್ರಚಾರಕ್ಕೆ ತೆರಳಿದ್ದು ಮುಂದಿನ ಕೆಲ ದಿನಗಳಲ್ಲಿ ಅವರು ಬಂದ ನಂತರ ಚರ್ಚಿಸಿ ನಮ್ಮ ಶಿಫಾರಸ್ಸನ್ನು ದೆಹಲಿಗೆ ಕಳುಹಿಸಿಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಹಿಜಬ್ ಹಾಗೂ ಕೇಶರಿ ವಸ್ತ್ರಧಾರಣೆ ಬಗ್ಗೆ ನಾನು ಸ್ಥಳೀಯ ನಾಯಕರ ಜೊತೆ ಚರ್ಚೆ ಮಾಡಬೇಕಾಗಿದೆ. ಮೊದಲಿನಿಂದ ಆಚರಿಸಿಕೊಂಡು ಬಂದ ಪದ್ದತಿ, ಸಂಸ್ಕೃತಿ, ಇತಿಹಾಸ, ಕಾನೂನು ಎಲ್ಲವನ್ನೂ ಚರ್ಚಿಸಬೇಕಾಗಿದೆ. ನಾನು ಈ ವಿಚಾರವನ್ನು ಗಮನಿಸುತ್ತಿದ್ದೇನೆ ಎಂದರು.
ನ್ಯಾಯಾಲಯ ಈಗಾಗಲೇ ಮಧ್ಯ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ನಾನು ಪಕ್ಷದ ಅಧ್ಯಕ್ಷನಾಗಿ ಮಾತನಾಡುವುದು ಸರಿಯಾಗುವುದಿಲ್ಲ. ಎಲ್ಲರಿಗೂ ಅವರದೇ ಆದ ಜೀವನ ಪದ್ದತಿ, ಸಂಸ್ಕೃತಿ ಇರುವುದನ್ನು ಚರ್ಚಿಸಬೇಕಿದೆ. ಇದು ಬಹಿರಂಗ ಚರ್ಚೆ ಮಾಡುವ ವಿಷಯವಲ್ಲ. ಮಕ್ಕಳು, ಧಾರ್ಮಿಕ ಆಚರಣೆಯಂತಹ ಸೂಕ್ಷ್ಮ ವಿಚಾರ ಇರುವುದರಿಂದ ಒಂದು ಚೌಕಟ್ಟಿನಲ್ಲಿ ಚರ್ಚೆ ಮಾಡಬೇಕಿದೆ ಎಂದರು.