ಕರ್ನಾಟಕವೂ ಸೇರಿದಂತೆ ರಾಜ್ಯ ಸರ್ಕಾರಗಳ ಜೊತೆ ಚರ್ಚೆ ನಡೆಸದೆ ರಾಜ್ಯದ ಜನರ ಅಭಿಪ್ರಾಯ ಪಡೆಯದೆ ನದಿ ಜೋಡಣೆ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಿಸಿರುವುದು ಒಕ್ಕೂಟ ವ್ಯವಸ್ಥೆಗೆ ಮಾಡಿರುವ ದ್ರೋಹವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದಕ್ಷಿಣ ನದಿಗಳ ಜೋಡಣೆಗೆ 46 ಸಾವಿರ ಕೋಟಿ ಅನುದಾನದ ಭರವಸೆ ನೀಡಿದ್ದಾರೆ. ಸಚಿವರು ತಮಿಳುನಾಡಿನವರು ಆಗಿದ್ದ ಕಾರಣಕ್ಕೆ ಈ ಯೋಜನೆ ಪ್ರಸ್ತಾಪ ಮಾಡಿರಬಹುದು. ಇದರಿಂದ ನಮಗೆ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ವಿಶ್ಲೇಷಿಸಿದ್ದಾರೆ.
ಕೃಷ್ಣ, ಗೋದಾವರಿ, ಪೆನ್ನಾರ್ ಮತ್ತು ಕಾವೇರಿ ನದಿಗಳು ಜೋಡಣೆ ಬಗ್ಗೆ ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿಯಲ್ಲಿ ಚರ್ಚಿಸಲಾಗಿದೆ. ಈ ಯೋಜನೆಯಿಂದ 347 ಟಿಎಂಸಿ ನೀರು ಸಿಗಲಿದ್ದು ದಕ್ಷಿಣ ರಾಜ್ಯಗಲಿಗೆ ಹಂಚಿಕೆ ಮಾಡುವ ಯೋಜನೆ ಇದಾಗಿದೆ ಎಂದರು.
ರಾಜಸ್ಥಾನ ಬಿಟ್ಟರೆ ದೇಶದಲ್ಲಿ ಹೆಚ್ಚು ಒಣಭೂಮಿ ಇರುವುದು ಕರ್ನಾಟಕದಲ್ಲಿ ಶೇ.70ರಷ್ಟು ಕೃಷಿ ಭೂಮಿ ಮಳೆ ಆಶ್ರಿತ ಪ್ರದೇಶವಾಗಿದೆ. ನದಿಗಳ ಜೋಡಣೆಯಿಂದ ಹೆಚ್ಚು ನೀರು ತಮಿಳುನಾಡಿಗೆ ಹೋಗುತ್ತದೆ. ಹೀಗಿದ್ದಾಗ ನಾವೇಕೆ ಈ ಯೋಜನೆಯನ್ನು ಒಪ್ಪಬೇಕು. ಕೇಂದ್ರ ಸರ್ಕಾರ ಕೂಡಲೇ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಸರ್ವಪಕ್ಷಗಳ ಸಭೆ ಕರೆದು ನದಿಜೋಡಣೆ ಬಗ್ಗೆ ಚರ್ಚೆ ನಡೆಸಬೇಕು ಎಂದು ಹೇಳಿದ್ದಾರೆ.
ನದಿಯಲ್ಲಿರುವ ನೀರಿನ ಲಭ್ಯತೆ ಮತ್ತು ಅದರಲ್ಲಿ ರಾಜ್ಯಗಳ ಪಾಲಿನ ಬಗ್ಗೆ ಮಾಹಿತಿ ಸಂಗ್ರಹಿಸಿ ರಾಜ್ಯಗಳಿಗೆ ನೀಡಬೇಕು. 1978ರಲ್ಲಿ ಮೊರಾರ್ಜಿ ದೇಸಾಯಿ, ನಂತರ ಪ್ರಧಾನಿ ಎ.ಬಿ.ವಾಜಪೇಯಿ ಅವರು ನದಿಜೋಡಣೆ ಯೋಜನೆಯ ಪ್ರಸ್ತಾಪ ಮಾಡಿದ್ದರು ಎಂದು ಸ್ಮರಿಸಿದರು.
ಗಂಗಾ ನದಿ ಹಿಮಾಲಯದಲ್ಲಿ ಹುಟ್ಟುವ ಕಾರಣಕ್ಕೆ ವರ್ಷವಿಡೀ ತುಂಬಿ ಹರಿಯುವುದರಿಂದ ನಮ್ಮ ರಾಜ್ಯಕ್ಕೆ ಅನುಕೂಲವಾಗಲಿದೆ ಎಂದು ನಿರೀಕ್ಷಿಲಾಗಿತ್ತು. ಅದು ಹುಸಿಯಾಗಿದೆ. ವಾಜಪೇಯಿ ಅವರು ಗಂಗಾ-ಕಾವೇರಿ ನದಿ ಜೋಡಣೆ ಯೋಜನೆಯನ್ನು ಪ್ರಸ್ತಾಪ ಮಾಡಿದರಾದರೂ ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದರು.
ಈಗಿನ ಬಿಜೆಪಿ ಸರ್ಕಾರ ಮತ್ತೆ ನದಿಜೋಡಣೆ ಪ್ರಸ್ತಾಪ ಮಾಡಿದೆ. ಇದರ ಸಾಧಕ ಬಾಧಕಗಳ ಬಗ್ಗೆ ರಾಜ್ಯದ ಜನರಿಗೆ ಮೊದಲು ಮಾಹಿತಿ ನೀಡಲಿ. ಬಜೆಟ್ ಮಂಡಿಸಿ ಮೂರು ದಿನಗಳಾದರೂ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿರುವ ನದಿ ಜೋಡಣೆ ಪ್ರಸ್ತಾಪಕ್ಕೆ ಯಾವೊಬ್ಬ ಸಂಸದ, ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಲು, ಸಚಿವರು, ಶಾಸಕರು ಮಾತನಾಡಿಲ್ಲ ಎಂದು ತಿಳಿಸಿದ್ದಾರೆ.
ಕರ್ನಾಟಕವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನದಿ ಜೋಡಣೆ ಯೋಜನೆ ಘೋಷಣೆ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಹಾಗಾಗಿ ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷ ಸಭೆ ಕರೆದು ಚರ್ಚಿಸಿ ಒಮ್ಮತದ ವಿರೋಧವನ್ನು ಕೇಂದ್ರಕ್ಕೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಮೇಕೆದಾಟು ಯೋಜನೆ ಬಗ್ಗೆ ರಾಜ್ಯದಿಂದ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಈ ಯೋಜನೆಗೆ ಪರಿಸರ ಅನುಮತಿ ಪತ್ರ ಕೊಡಿಸಲಿ. ನದಿ ಜೋಡಣೆ ಆಮೇಲೆ ನೋಡೋಣ ಎಂದರು.