ಜಾರಿ ನಿರ್ದೇಶನಾಲಯದಂತಹ ಏಜೆನ್ಸಿಗಳ ಅಧಿಕಾರಿಗಳು ಸ್ವಯಂ ನಿವೃತ್ತಿ ಘೋಷಿಸಿ ರಾಜಕೀಯ ಪಕ್ಷಗಳಿಗೆ ಸೇರ್ಪಡೆಯಾಗುತ್ತಿರುವುದು ಏಜೆನ್ಸಿಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತಾಗಿದೆ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.
ಬಿಜೆಪಿ ತನ್ನ ರಾಜಕೀಯ ಪ್ರತಿಸ್ಪರ್ಧಿಗಳ ಮೇಲೆ ದಾಳಿ ಮಾಡಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ಬಳಸಿಕೊಳ್ಳುತ್ತಿದೆ. ನಂತರ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುತ್ತದೆ ಎಂದು ಆರೋಪಿಸಿದ್ದಾರೆ.
ಲಕ್ನೋದ ಸರೋಜಿನಿ ನಗರ ಕ್ಷೇತ್ರದಿಂದ ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ರಾಜೇಶ್ವರ್ ಸಿಂಗ್ ಅವರ ಉಮೇದುವಾರಿಕೆಯನ್ನು ಘೋಷಿಸಿದ ಕೇಸರಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಏಜೆನ್ಸಿಯ ಅಧಿಕಾರಿಯೊಬ್ಬರು ಬಿಜೆಪಿ ಟಿಕೆಟ್ ನಲ್ಲಿ ಚುನಾವಣೆಗೆ ಸ್ಪರ್ಧಿಸಿದಾಗ ಯಾರಾದರೂ ಹೇಗೆ ನಂಬುತ್ತಾರೆ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ತಮ್ಮ ಪಕ್ಷದ ಯೋಜನೆಗಳ ಕುರಿತು ಮಾತನಾಡಿರುವ ರಾವುತ್ ಶಿವಸೇನೆ 50-60 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಹೇಳಿದರು.
ನಾವು ಈಗಾಗಲೇ ಉತ್ತರ ಪ್ರದೇಶದಲ್ಲಿ ಸುಮಾರು 20 ಸ್ತಾನಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ್ದೇವೆ. ನಾವು ಯಾವುದೇ ಪ್ರಮುಖ ಪಕ್ಷದೊಂದಿಗೆ ಮೈತ್ರಿ ಹೊಂದಿಲ್ಲ. ಆದರೆ ಕೆಲವು ಸಣ್ಣ ಗುಂಪುಗಳೊಂದಿಗೆ ಪಾಲುದಾರಿಕೆ ಹೊಂದಿದ್ದೇವೆ. ನಾವು ಉತ್ತರ ಪ್ರದೇಶದ ಲೋಕಸಭಾ ಚುನಾವಣೆಯಲ್ಲಿ 15-20 ಸ್ಥಾನಗಳಲ್ಲಿ ಸ್ಪರ್ಧಿಸುತ್ತೇವೆ ಎಂದು ರಾವುತ್ ತಿಳಿಸಿದರು.
ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕರಾಗಿರುವ ರಾವುತ್ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನಿರ್ದೇಶನದ ಮೇರೆಗೆ ಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದು ಆರೋಪಿಸಿದ್ದಾರೆ.
ನಮ್ಮ ಅಭ್ಯರ್ಥಿಗಳ ಕೈಯಲ್ಲಿ ಸೋಲುವ ಭಯದಿಂದ ಉತ್ತರ ಪ್ರದೇಶದಲ್ಲಿ ನಮ್ಮ ಅಭ್ಯರ್ಥಿಗಳ ಸುಮಾರು 15 ನಾಮಪತ್ರಗಳನ್ನು ಬಿಜೆಪಿಯ ಆಜ್ಞೆಯ ಮೇರೆಗೆ ರದ್ದುಗೊಳಿಸಲಾಗಿದೆ. ನಾವು ನಮ್ಮ ಪ್ರಯತ್ನವನ್ನು ಮುಂದುವರೆಸುತ್ತೇವೆ. ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ ಎಂದರು.


