ರೈತರಿಗೆ ಮಾರಕವಾಗಿರುವ ಮೂರು ಕೃಷಿ ಸಂಬಂಧಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಫೆಬ್ರವರಿ 14ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವ ಭರವಸೆ ನೀಡಿತು. ಆದರೆ ಇದುವರೆಗೂ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿಲ್ಲ ಎಂದು ತಿಳಿಸಿದ್ದಾರೆ.
ಫೆಬ್ರವರಿ 14ರಂದು ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ವಿಧಾನಸೌಧದ ವರೆಗೆ ಮೆರವಣಿಗೆ ನಡೆಸಿ ಮುತ್ತಿಗೆ ಹಾಕಲಾಗುವುದು. ತುಮಕೂರು ಜಿಲ್ಲೆಯಿಂದ 1 ಸಾವಿರಕ್ಕೂ ಹೆಚ್ಚು ಮಂದಿ ರೈತರು ವಿಧಾನಸೌಧ ಮುತ್ತಿಗೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ತುಮಕೂರು ಜಿಲ್ಲೆಯಲ್ಲಿ ಹಲವು ಸಮಸ್ಯೆಗಳಿವೆ. ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವೂ ನಡೆದಿಲ್ಲ. ರಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಿದ್ದರೂ ರಾಗಿ ಖರೀದಿ ಮಾಡುತ್ತಿಲ್ಲ. ನೋಂದಣಿ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ. ಸರ್ಕಾರದ ಅವೈಜ್ಞಾನಿಕ ತೀರ್ಮಾನದಿಂದ ರೈತರು ಸಮಸ್ಯೆ ಎದುರಿಸುವಂತೆ ಆಗಿದೆ ಎಂದು ಹೇಳಿದರು.
ಮಾವು, ಶ್ರೀಗಂಧ ಸಸಿಗಳನ್ನು ನೆಟ್ಟು ಅದರ ನಡುವೆ ರಾಗಿ ಬೆಳೆದರೆ ಅದಕ್ಕೆ ಪರಿಹಾರ ನೀಡುವುದಿಲ್ಲ. ರಾಗಿ ಖರೀದಿಗೆ ಹಲವು ನಿರ್ಬಂಧಗಳನ್ನು ಹಾಕಲಾಗಿದೆ. ಒಬ್ಬ ರೈತನಿಂದ 14 ಕ್ವಿಂಟಾಲ್ ರಾಗಿಯನ್ನು ಮಾತ್ರ ಖರೀದಿ ಮಾಡುತ್ತೇವೆ. ಹೆಚ್ಚುವರಿ ರಾಗಿ ಖರೀದಿ ಮಾಡುವುದಿಲ್ಲ ಎಂಬ ಅವೈಜ್ಞಾನಿಕ ನೀತಿಯಿಂದ ರೈತರು ಸಂಕಟ ಅನುಭವಿಸುವಂತೆ ಆಗಿದೆ ಎಂದರು.
ಬಹುಬೆಳೆ ಪದ್ಧತಿಯನ್ನು ಅಳವಡಿಸಿಕೊಳ್ಲುವಂತೆ ಸರ್ಕಾರ ಹೇಳಿದೆ. ಅದರಂತೆ ಶ್ರೀಗಂಧ ಮತ್ತು ಮಾವು ನಡುವೆ ರಾಗಿ ಬೆಳೆಯುತ್ತಿದ್ದೇವೆ. ಆದರೆ ಸರ್ಕಾರ ಇದನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವುದಿಲ್ಲ ಎಂದು ಹೇಳುತ್ತಿದೆ. ಯಾರೇ ಆಗಿಲಿ ಬೆಂಬಲ ಬೆಲೆ 3377 ರೂಗಳಿಗಿಂತ ಕಡಿಮೆ ಬೆಲೆಗೆ ಖರೀದಿಸಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲೆಗೆ ಎತ್ತಿನಹೊಳೆ ಯೋಜನೆ ತರುವ ಪ್ರಯತ್ನ ಮಾಡಲಾಗುತ್ತಿದ್ದು, ಇದುವರೆಗೂ ಯೋಜನೆ ಪೂರ್ಣಗೊಂಡಿಲ್ಲ. ಕೊರಟಗೆರೆ ಬಳಿ ಡ್ಯಾಂ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದೆ. ರೈತರ ಭೂಮಿಯನ್ನು ಮಾರುಕಟ್ಟೆ ಬೆಲೆಗೆ ಖರೀದಿಸಿ ಪರಿಹಾರ ನೀಡಬೇಕು. ಆದರೆ ಸರ್ಕಾರ ಈ ಬಗ್ಗೆ ಯೋಚಿಸುತ್ತಿಲ್ಲ ಎಂದು ದೂರಿದರು.