ಫೆಬ್ರವರಿ 14 ರಿಂದ ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜುಗಳನ್ನು ಪುನರಾರಂಭಿಸುವ ಬಗ್ಗೆ ತೀರ್ಮಾನ ಮಾಡುವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಫೆಬ್ರವರಿ 14 ರಿಂದ 10ನೇ ತರಗತಿಯವರೆಗೆ ಪ್ರೌಢಶಾಲಾ ವಿದ್ಯಾರ್ಥಿಗಳು, ಪದವಿಪೂರ್ವ ಕಾಲೇಜು ಮತ್ತು ಪದವಿ ಕಾಲೇಜುಗಳಿಗೆ ತರಗತಿಗಳನ್ನು ಪುನರಾರಂಭವಾಗಲಿದೆ. ಸೋಮವಾರ ಸಂಜೆ ಮುಖ್ಯಮಂತ್ರಿಗಳು ಕರೆದಿರುವ ಸಭೆಯಲ್ಲಿ ಪಿಯುಸಿ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ತರಗತಿಗಳನ್ನು ಆರಂಭಿಸುವ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಲು ಪ್ರಯತ್ನಿಸುತ್ತೇವೆ ಎಂದರು.
ಗೃಹ ಸಚಿವ ಅರಗ ಜ್ಞಾನೇಂದ್ರ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಪುನರಾರಂಭಿಸುವ ಸಂದರ್ಭದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಎಲ್ಲಾ ಜಿಲ್ಲೆಗಳ ಪೊಲೀಸ್ ವರಿಷ್ಠರಿಗೆ ಸೂಚನೆ ನೀಡಲಾಗಿದೆ. ಪೊಲೀಸರು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ದರಿದ್ದಾರೆ ಎಂದು ಹೇಳಿದರು.
ಈಗಾಗಲೇ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದ್ದು ಅಲ್ಲಿ ಕೈಗೊಳ್ಳಬೇಕಾಧ ಕ್ರಮಗಳನ್ನು ಪೊಲೀಸರು ಕೈಗೊಳ್ಳುತ್ತಾರೆ. ಕೆಲ ಧಾರ್ಮಿಕ ಮತಾಂಧರು ವಿದ್ಯಾರ್ಥಿಗಳನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ನಾವು ಅವರನ್ನು ಬಂಧಿಸುತ್ತೇವೆ ಎಂದು ಅರಗ ಜ್ಞಾನೇಂದ್ರ ಹೇಳಿಕೆಯನ್ನು ಉಲ್ಲೇಖಿಸಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಇದು ಪೂರ್ವ ಯೋಜಿತ ಎಂಬ ಕೆಲವು ಮಾಹಿತಿಗಳಿವೆ. ಆದರೆ ನಾನು ಏನನ್ನೂ ವಿವರವಾಗಿ ಹೇಳುವುದಿಲ್ಲ. ಅದು ತನಿಖೆಯ ಮೂಲಕವೇ ಹೊರಬರಬೇಕು. ಪೊಲೀಸರು ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.