ದೇಶದ ಸಂವಿಧಾನ ಮತ್ತು ರಾಷ್ಟ್ರಧ್ವಜಕ್ಕೆ ಧಕ್ಕೆಯಾಗುತ್ತಿದ್ದು ಬಿಜೆಪಿ ಇದನ್ನು ರಕ್ಷಿಸುವ ಗೋಜಿಗೆ ಹೋಗುತ್ತಿಲ್ಲ. ಈ ದೇಶದ ಸಂವಿಧಾನ ನಮ್ಮ ಪಾಲಿಗೆ ಭಗವದ್ಗೀತೆ, ಕುರಾನ್ ಮತ್ತು ಬೈಬಲ್ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಎಂಬ ಸಚಿವ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂವಿಧಾನ ವಿರೋಧಿ ಹೇಳಿಕೆಯನ್ನು ನೀಡಿರುವ ಈಶ್ವರಪ್ಪ ಅವರನ್ನು ಸರ್ಕಾರದಲ್ಲಿ ಇಟ್ಟುಕೊಂಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದ್ದಾರೆ.
ಪೊಲೀಸರು ಬಿಜೆಪಿ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ. ಇದು ಶಾಶ್ವತವಲ್ಲ. ಯಾರೆಲ್ಲಾ ಬಿಜೆಪಿ ಕಾರ್ಯಕರ್ತರಂತೆ ಕೆಲಸ ಮಾಡುತ್ತಿದ್ದಾರೋ ಅವರೆಲ್ಲರ ಪಟ್ಟಿ ಇಟ್ಟುಕೊಂಡಿದ್ದು, ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯದ ಜನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರುವ ವಿಶ್ವಾಸ ಇಟ್ಟುಕೊಂಡಿದೆ. ರಾಜ್ಯ ಹಾಗೂ ದೇಶದಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದರು.
ಹಲವು ದಶಕಗಳ ಇತಿಹಾಸವುಳ್ಳ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಹಾಕಿಕೊಳ್ಳುವ ಅದೃಷ್ಟ ಇದೆ. ಬೇರೆಯವರಿಂದ ಇದು ಸಾಧ್ಯವಿಲ್ಲ ಎಂದರು. ಪಕ್ಷ ಸೇರಲು ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ಭಾಗವಹಿಸಿ ಮನೆ ಮನೆಗೆ ಹೋಗಿ ಬೇರೆಯವರನ್ನು ಸದಸ್ಯರನ್ನಾಗಿ ಮಾಡಿ ಎಂದು ಸಲಹೆ ನೀಡಿದರು.
ಕೇಸರಿ ಶಾಲು ಹಾಗೂ ಹಿಜಾಬ್ ವಿವಾದಕ್ಕೆ ಸರ್ಕಾರವೇ ಪ್ರೋತ್ಸಾಹ ನೀಡಿದೆ. ಪ್ರಾರಂಭದಲ್ಲೇ ನಿಯಂತ್ರಣ ಮಾಡಬಹುದಾಗಿತ್ತು, ಆದರೆ ಮಾಡಲಿಲ್ಲ ಎಂದು ಆರೋಪಿಸಿದರು.
ಕೇಸರಿ ಶಾಲು ವಿವಾದದಲ್ಲಿ ನಮ್ಮ ನಿಲುವು, ಸಂವಿಧಾನಕ್ಕೆ ಬದ್ಧವಾಗಿರುವುದು. ನಾವು ಮೊದಲಿನಿಂದಲೂ ಅಲ್ಪಸಂಖ್ಯಾತರ ರಕ್ಷಣೆ ಮಾಡಿಕೊಂಡು ಬಂದಿದ್ದು, ಮುಂದೆಯೂ ಮಾಡುತ್ತೇವೆ ಎಂದರು.
ಎಬಿವಿಪಿ ಜತೆಯಲ್ಲಿ ಪ್ರತಿಭಟನೆ ಮಾಡಿದ ಐದಾರು ಹುಡುಗಿಯರು, ಸಿಎಫ್ಐ ಜತೆಯೂ ಪ್ರತಿಭಟನೆ ಮಾಡಿದ್ದಾರೆ. ಇವರು ಯಾರ ಸಂಪರ್ಕದಲ್ಲಿದ್ದಾರೆ, ಎಬಿವಿಪಿಯಲ್ಲಿ ಇದ್ದವರು ಈಗ ಇವರ ಜತೆ ಹೇಗೆ ಇದ್ದಾರೆ? ಎಬಿವಿಪಿ ಎಂದರೆ ಬಿಜೆಪಿಯಲ್ಲವೇ? ಎಂದು ಪ್ರಶ್ನಿಸಿದರು.