ರಾಜ್ಯಪಾಲರ ಭಾಷಣ ಕೇಳಿದರೆ ಈ ಸರ್ಕಾರಕ್ಕೆ ಯಾವ ಗೊತ್ತುಗುರಿ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ. ಕನ್ನಡಿಗರನ್ನು ಸಾಲದ ಪ್ರಪಾತಕ್ಕೆ ತಳ್ಳಿದ್ದರ ಬಗ್ಗೆ ಇಂದಿನ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರದ ಕೆಲವು ಯೋಜನೆಗಳನ್ನು ರಾಜ್ಯ ಸರ್ಕಾರ ತನ್ನ ಯೋಜನೆಗಳು ಎಂದು ಬಿಂಬಿಸಿಕೊಂಡಿದೆ. ಸರ್ಕಾರಗಳಿಗೆ ತನ್ನದೇ ಆದ ಆದ್ಯತೆಗಳಿರುತ್ತವೆ. ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಕಲ್ಯಾಣ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ಕೊಡುವುದಾಗಿದೆ. ಆದರೆ ಈ ಸರ್ಕಾರ ಸಂಪೂರ್ಣವಾಗಿ ಇವೆರಡನ್ನೂ ಮರೆತಿದೆ ಎಂದಿದ್ದಾರೆ.
ಸಾಮಾನ್ಯವಾಗಿ ರಾಜ್ಯಪಾಲರ ಭಾಷಣ ಸರ್ಕಾರದ ಒಂದು ವರ್ಷದ ಸಾಧನೆ ಮತ್ತು ಮುಂದಿನ ವರ್ಷಕ್ಕೆ ಇರಬೇಕಾದ ಮುನ್ನೋಟದ ಗುರಿಗಳನ್ನು ಒಳಗೊಂಡಿರುತ್ತದೆ. ಈ ಸರ್ಕಾರ ಕಳೆದ ಒಂದು ವರ್ಷದಿಂದ ಏನನ್ನು ಮಾಡಿಲ್ಲ ಎಂಬುದಕ್ಕೆ ರಾಜ್ಯಪಾಲರ ಭಾಷಣವೇ ಸಾಕ್ಷಿ ಎಂದು ಹೇಳಿದ್ದಾರೆ.
ರಾಜ್ಯಪಾಲರ ಭಾಷಣದಲ್ಲಿ 116 ಪ್ಯಾರಾಗಳಿವೆ. ಅದರಲ್ಲಿ 23 ಪ್ಯಾರಾಗಳು ಕೊವಿಡ್ ಮತ್ತು ಪ್ರವಾಹಕ್ಕೆ ಸಂಬಂಧಪಟ್ಟಿವೆ. ಇನ್ನುಳಿದಂತೆ ಸುಮಾರು 30 ಪ್ಯಾರಾಗಳು ಹಳೆಯ ಭರವಸೆಗಳಾಗಿವೆ. ಬಾಕಿ ಉಳಿದವು ನಮ್ಮ ಸರ್ಕಾರದ ಸಾಧನೆಗಳು ಮತ್ತು ಹೆಸರು ಬದಲಿಸಿದ ಯೋಜನೆಗಳ ಮಾಹಿತಿ ಎಂದು ತಿಳಿಸಿದ್ದಾರೆ.
ರಾಜ್ಯಪಾಲರ ಭಾಷಣದ ಮೂಲಕ ಈ ಸರ್ಕಾರ ಪರಿಶಿಷ್ಟರು, ಮಹಿಳೆಯರು, ಮಕ್ಕಳು, ಅಲ್ಪಸಂಖ್ಯಾತರು, ರೈತರು, ಕುಶಲ ಕರ್ಮಿಗಳು, ಸಣ್ಣ ಮಧ್ಯಮ ಸೂಕ್ಷ್ಮ ಕೈಗಾರಿಕೆಗಳನ್ನು ನಡೆಸುವವರು, ಬೀದಿಬದಿ ವ್ಯಾಪಾರಿಗಳು ದಿನಗೂಲಿ ಕಾರ್ಮಿಕರಿಗೆ ಏನನ್ನೂ ಮಾಡಿಲ್ಲ ಎಂಬುದನ್ನು ಒಪ್ಪಿಕೊಂಡಿದೆ ಎಂದರು.
ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ ಆದರೆ ನಿರುದ್ಯೋಗವನ್ನ ಪರಿಹರಿಸಲು ಈ ಸರ್ಕಾರ ಏನನ್ನೂ ಮಾಡಿಲ್ಲ. ಕಲ್ಯಾಣ ಕರ್ನಾಟಕ ಮಂಡಳಿಗೆ ಸಂಬಂಧಪಟ್ಟ ಹಾಗೆ ಹೆಸರು ಬದಲಾಯಿಸಿದ್ದು, ಕಚೇರಿ ಸ್ಥಳಾಂತರಿಸಿದ್ದನ್ನೇ ಸಾಧನೆ ಎಂದು ಹೇಳಿಕೊಂಡಿದೆ ಎಂದು ಲೇವಡಿ ಮಾಡಿದ್ದಾರೆ.