ಕೆಂಪುಕೋಟೆಯ ಮೇಲೆ ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂದು ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿರುವ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಶಾಸಕತ್ವಕ್ಕೆ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ ಯುವ ಕಾಂಗ್ರೆಸ್ ಮತ್ತು ನಗರ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ ಯೂತ್ ಕಾಂಗ್ರೆಸ್ ಮತ್ತು ನಗರ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಬಿಜೆಪಿ ನಾಯಕರು ಅಭಿವೃದ್ಧಿ ಕೆಲಸಗಳನ್ನು ಮಾಡುವುದು ಬಿಟ್ಟು ಜನರನ್ನು ಭಾವನಾತ್ಮಕವಾಗಿ ಮರುಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸಂವಿಧಾನದ ರೀತಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿರುವ ಸಚಿವ ಈಶ್ವರಪ್ಪ ಸಂವಿಧಾನ ಆಶಯಗಳಿಗೆ ಧಕ್ಕೆ ತಂದಿದ್ದಾರೆ. ಹಾಗಾಗಿ ಸಂಪುಟದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಶ್ವರಪ್ಪ ಅವರನ್ನು ವಜಾಗೊಳಿಸಬೇಕು. ಅಷ್ಟೇ ಅಲ್ಲ ಅವರು ಶಾಸಕ ಸ್ಥಾನಕ್ಕೂ ರಾಜಿನಾಮೆ ಕೊಡುವವರೆಗೂ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರತಿಭಟನಾಕಾರು ಎಚ್ಚರಿಕೆ ನೀಡಿದರು.
ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಶಿ ಹುಲಿಕುಂಟೆ ಮಾತನಾಡಿ, ಈಶ್ವರಪ್ಪ ಓರ್ವ ಹುಚ್ಚ. ದೇಶದ ಬಾವುಟವನ್ನೇ ಬದಲಾಯಿಸಲು ಹೊರಟಿದ್ದಾರೆ. ಆ ಮೂಲಕ ರಾಷ್ಟ್ರಧ್ವಜಕ್ಕೆ ಅಗೌರವ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಪ್ರತಿಭಟನೆ ನಡೆಸಿದ್ದೇವೆ ಎಂದರು.

ದೇಶದ ಬಾವುಟವನ್ನು ಬದಲಿಸಲು ಹೊರಟಿರುವ ಬಿಜೆಪಿ ಮುಖಂಡರಿಗೆ ತಕ್ಕಪಾಠ ಕಲಿಸುತ್ತೇವೆ. ಮೈಸೂರು ಲೋಕಸಭಾ ಸದಸ್ಯ ಟ್ರೈನ್ ಹೆಸರನ್ನೇ ಬದಲಾಯಿಸುವ ಮಾತನಾಡಿದ್ದಾರೆ. ಬಿಜೆಪಿ ಮುಖಂಡರು ಕೆಲಸ ಮಾಡುವುದನ್ನು ಬಿಟ್ಟು ಜನರನ್ನು ದಿಕ್ಕುತಪ್ಪಿಸುವ ಕೆಲಸಕ್ಕೆ ಕೈಹಾಕಿದ್ದಾರೆ. ಇಂಥವರಿಗೆ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಮುಖಂಡರನ್ನು ಹೀಗೆ ಬಿಟ್ಟರೆ ದೇಶವನ್ನೇ ಹಾಳು ಮಾಡುತ್ತಿದ್ದಾರೆ. ಕೋಮುವಾದಿ ಬಿಜೆಪಿಗೆ ಇಂತಹ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.


