ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಆರೋಪ ಎದುರಿಸುತ್ತಿರುವ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಆಗಮಿಸಿದ್ದ ದಲಿತ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ರೈಲ್ವೆ ನಿಲ್ದಾಣದ ಬಳಿ ಸಮಾವೇಶಗೊಂಡು ವಿಧಾನಸೌಧ ಮತ್ತು ಹೈಕೋರ್ಟ್ ಚಲೋಕ್ಕಾಗಿ ಮೆರವಣಿಗೆ ನಡೆಸಿದರು.
ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಪ್ರತಿಯೊಬ್ಬರೂ ನೀಲಿ ಬಾವುಟಗಳನ್ನು ಹಿಡಿದು ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಮೆರವಣಿಗೆಯಲ್ಲಿ ತೆರಳಿದರು. ರಾಯಚೂರು ಜಿಲ್ಲಾ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುಗೌಡ ಅವರು ಗಣರಾಜ್ಯೋತ್ಸವ ದಿನದಂದು ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ತೆರವುಗೊಳಿಸಿ ಅಪಮಾನ ಮಾಡಿದ್ದಾರೆ. ಇದನ್ನು ಖಂಡಿಸುತ್ತೇವೆ ಎಂದು ಪ್ರತಿಭಟನಾಕಾರರು ಹೇಳಿದರು.
ದಲಿತ ಮುಖಂಡ ಮಾವಳ್ಳಿ ಶಂಕರ್ ಮಾತನಾಡಿ, ಮಲ್ಲಿಕಾರ್ಜುನ ಗೌಡ ನ್ಯಾಯಾಧೀಶರು. ಆದರೆ ಅವರ ಒಳಗೆ ಇರುವುದು ಜಾತಿವಾದಿ ಮನಸ್ಸು. ಬಸವಣ್ಣ ಮತ್ತು ಕುವೆಂಪು ನಾಡಿನಲ್ಲಿ ಜಾತಿವಾದಿ ಮನಸ್ಸುಗಳು ನ್ಯಾಯಾಲಯದಲ್ಲಿ ಕುಳಿತಿರುವುದು ಅತ್ಯಂತ ಅಪಮಾನಕರ ಸಂಗತಿ. ಅಂಬೇಡ್ಕರ್ ಅವರಿಗೆ ಕಿಂಚಿತ್ತು ಅವಮಾನವಾದರೂ ಶೋಷಿತ ಸಮುದಾಯಗಳು ಸುಮ್ಮನಿರುವುದಿಲ್ಲ ಎಂದು ಹೇಳಿದರು.
ಬಾಬಾ ಸಾಹೇಬರು ಸಮಾನತೆ, ಭ್ರಾತೃತ್ವದ ಸಂಕೇತ. ಎಲ್ಲಾ ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕು. ಪ್ರತಿಭಟನೆಗೆಯಿಂದಾಗಿ ಹೈಕೋರ್ಟ್ ರಾಷ್ಟ್ರೀಯ ಹಬ್ಬಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್ ಪೋಟೊ ಇಡಲು ಸೂಚಿಸಿದೆ. ಬೇರೆ ದಿನಗಳಲ್ಲಿಯೂ ಅಂಬೇಡ್ಕರ್ ಭಾವಚಿತ್ರವನ್ನು ಇಡಬೇಕು ಎಂದು ಆಗ್ರಹಿಸಿದರು