ಬಿಜೆಪಿ ಕಾರ್ಯಕರ್ತ ಹರ್ಷನ ಕೊಲೆ ನಡೆದ ಮರುದಿನ ಶಿವಮೊಗ್ಗದಲ್ಲಿ 144 ನೇ ಸೆಕ್ಷನ್ ಜಾರಿಯಲ್ಲಿದ್ದರೂ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಶವಯಾತ್ರೆ ನಡೆಸುವ ಮೂಲಕ ಕಾನೂನು ಉಲ್ಲಂಘಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ಶವಯಾತ್ರೆ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವಾಗಿದೆ. ಕಲ್ಲು ತೂರಾಟ ನಡೆದಿದೆ. ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇದು ಸೆಕ್ಷನ್ 144ರ ನಿಷೇಧಾಜ್ಞೆಯ ಉಲ್ಲಂಘನೆಯಾಗಿದ್ದು ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಶಿವಮೊಗ್ಗದಲ್ಲಿ ಮೂರು ದಿನಗಳಲ್ಲಿ 3 ಕೊಲೆ ನಡೆದಿವೆ. ಶಿವಮೊಗ್ಗ ಗೃಹ ಸಚಿವರ ತವರು ಜಿಲ್ಲೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಈಶ್ವರಪ್ಪ ಮತ್ತು ಸಂಸದ ರಾಘವೇಂದ್ರ ಶಿವಮೊಗ್ಗ ಜಿಲ್ಲೆಯವರು. ಅಲ್ಲೇ ಇಂತಹ ಕೊಲೆಗಳು ನಡೆಯುತ್ತವೆ ಎಂದರೆ ರಾಜ್ಯ ಸರ್ಕಾರ ಇದೆಯೇ ಎಂಬ ಪ್ರಶ್ನೆ ಮೂಡುತ್ತದೆ ಎಂದು ಆರೋಪಿಸಿದರು.
ಹರ್ಷ ಕೊಲೆಯಾದ ದಿನವೇ 144 ಸೆಕ್ಷನ್ ಜಾರಿ ಮಾಡಿದರು. ಆದರೂ ಮೃತನ ಶವಯಾತ್ರೆ ನಡೆಸಲು ಪೊಲೀಸ್ ಇಲಾಖೆ ಅವಕಾಶ ನೀಡಿದ್ದು ಹೇಗೆ? ಮತ್ತು ಏಕೆ? ಶವಯಾತ್ರೆಯಲ್ಲಿ ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಭಾಗಿಯಾಗಿದ್ದರು. ಹೀಗಾಗಿ ಈ ಶವಯಾ್ರೆ ರಾಜ್ಯ ಸರ್ಕಾರದ ಪ್ರಾಯೋಜಿತ ಶವಯಾತ್ರೆ ಎಂದು ಹೇಳಿದರು.
ತಮ್ಮದೇ ಸರ್ಕಾರ 144 ಸೆಕ್ಷನ್ ಹಾಕಿದೆ. ಸರ್ಕಾರದ ಸಚಿವರ ಎದುರೇ ಕಲ್ಲುತೂರಾಟ ನಡೆದಿದೆ. ಅಂಗಡಿ, ವಾಹನಗಳಿಗೆ ಬೆಂಕಿ ಹಾಕಲಾಇದೆ. ಜನ ಗುಂಪು ಗುಂಪಾಗಿ ಕತ್ತಿ ತಲ್ವಾರ್ ಹಿಡಿದು ಓಡಾಡಿದ್ದಾರೆ. ಮೆರವಣಿಗೆಯಲ್ಲಿ ಸಚಿವ ಈಶ್ವರಪ್ಪ ಅವರೇ ಮುಂದೆ ನಿಂತಿದ್ದಾರೆ ಎಂದರೆ ಇದು ನಾಗರಿಕ ಸರ್ಕಾರವೇ ಎಂದು ಪ್ರಶ್ನಿಸಿದರು.
ಶಿವಮೊಗ್ಗದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿ ಆಸ್ತಿಪಾಸ್ತಿ ನಷ್ಟವಾಗಿದ್ದರೆ ಅದಕ್ಕೆ ಸಚಿವ ಈಶ್ವರಪ್ಪ ಅವರೇ ನೇರ ಹೊಣೆ. ರಾಜ್ಯದಲ್ಲಿ ಈಶ್ವರಪ್ಪ ಅವರದೇ ಪಕ್ಷದ ಸರ್ಕಾರ ಇದೆ. ಪಿಎಫ್ಐ ಮತ್ತು ಎಸ್ಡಿಪಿಐಗಳು ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಸಾಕ್ಷ್ಯಗಳು ಇದ್ದರೆ ಕೂಡಲೇ ಅವುಗಳನ್ನು ನಿಷೇಧ ಮಾಡಲಿ ಎಂದು ಆಗ್ರಹಿಸಿದರು.
ಹರ್ಷ ಕೊಲೆ ಪ್ರಕರಣವನ್ನು ಎನ್ಐಎ ಅಥವಾ ಬೇರೆ ಯಾವ ತನಿಖಾ ಸಂಸ್ಥೆಯ ಮೂಲಕವಾದರೂ ತನಿಖೆ ನಡೆಸಲಿ ಅದಕ್ಕೆ ನಮ್ಮ ತಕರಾರು ಇಲ್ಲ ಎಂದು ಸ್ಪಷ್ಟಪಡಿಸಿದರು.