ಸಾಮಾಜಿಕ ಕಾರ್ಯಕರ್ತ ಹಾಗೂ ನಟ ಚೇತನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಕುಟುಂಬದ ಸದಸ್ಯರಿಗೂ ಮಾಹಿತಿ ನೀಡದೆ ಚೇತನ್ ಅವರನ್ನು ಬಂಧಿಸಲಾಗಿದೆ ಎಂದು ಪತ್ನಿ ಮೇಘನ ಆರೋಪಿಸಿದ್ದಾರೆ.
ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆ ಎದುರು ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿರುವ ಮೇಘ, ಇಂದು ಮಧ್ಯಾಹ್ನ 3 ಗಂಟೆಯಿಂದ ನನ್ನ ಪತಿ ಚೇತನ್ ಕಾಣುತ್ತಿಲ್ಲ. ನಮ್ಮ ಮನೆಯಲ್ಲಿ ಕೆಲಸ ಮಾಡುವವರು ಪೊಲೀಸರು ಚೇತನ್ ಅವರನ್ನು ಕರೆದುಕೊಂಡು ಹೋದರು ಎಂದು ಹೇಳುತ್ತಿದ್ದಾರೆ ಎಂದು ತಿಳಿಸಿದರು.
ಚೇತನ್ ಅವರ ಪೋನ್ ಸ್ವಿಚ್ ಆಫ್ ಆಗಿದೆ. ಅವರ ಗನ್ ಮ್ಯಾನ್ ಪೋನ್ ಕೂಡ ಸಿಗುತ್ತಿಲ್ಲ. ಇದು ಪೊಲೀಸರು ಮಾಡಿರುವ ಅಪಹರಣವಾಗಿದೆ ಎಂದು ದೂರಿದ್ದಾರೆ.
ಬಂಧಿಸುವ ಮೊದಲು ಕುಟುಂಬದ ಸದಸ್ಯರಿಗೆ ತಿಳಿಸಬೇಕು. ಆದರೆ ಯಾರಿಗೂ ತಿಳಿಸಿಲ್ಲ. ನೋಟೀಸನ್ನು ಕೊಟ್ಟಿಲ್ಲ. ಇಂತಹ ಸಂದರ್ಭದಲ್ಲಿ ಅವರು ವಕೀಲರ ಸಹಾಯ ಪಡೆಯಲು ಅವಕಾಶವಿದೆ. ಇದನ್ನು ಪೊಲೀಸರು ಉಲ್ಲಂಘಿಸಿದ್ದು, ಪೊಲೀಸರು ಚೇತನ್ ಅವರಿಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ.
ಪೊಲೀಸರು ಯಾವುದೇ ಮಾಹಿತಿ ನೀಡದೆ ಬಂಧಿಸಿರುವುದು ದೊಡ್ಡ ಅನ್ಯಾಯ. ಚೇತನ್ ಅವರ ಪೋನ್ ಗಳನ್ನು ಕಿತ್ತುಕೊಳ್ಳಲಾಗಿದೆ. ಈಗ ಚೇತನ್ ಎಲ್ಲಿದ್ದಾರೆಂಬುದು ಗೊತ್ತಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ. ಹಾಗಾಗಿ ನ್ಯಾಯ ಕೇಳಲು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಬಂದಿದ್ದೇನೆ ಎಂದು ಮೇಘ ಹೇಳಿದ್ದಾರೆ.
ಹಿಜಾಬ್ ಕುರಿತು ದಾಖಲಾಗಿರುವ ಅರ್ಜಿಯ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಬಗ್ಗೆ ಎರಡು ವರ್ಷದ ಹಿಂದೆ ಟ್ವೀಟ್ ಮಾಡಿದ್ದು ಅದು ನ್ಯಾಯಾಂಗ ನಿಂದನೆ ಪ್ರಕರಣವಾಗಿದೆ. ಹಾಗಾಗಿ ಪೊಲೀಸರು ಚೇತನ್ ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗುತ್ತಿದೆ.


