ಕಳೆದ ಎರಡು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಹಾಗಾಗಿ ರಾಜ್ಯ ಜನ ಶಾಪ ಹಾಕುತ್ತಿದ್ದು ಜನರು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಇದೊಂದು ನಿಷ್ಕ್ರಿಯ, ಭ್ರಷ್ಟ ಸರ್ಕಾರ. ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧೀ ಅವರು ರಾಜ್ಯದ ಹಿರಿಯ ನಾಯಕರನ್ನು ದೆಹಲಿಗೆ ಕರೆದು ಸಭೆ ನಡೆಸಿ ರಾಜ್ಯದ ಸದ್ಯದ ಸ್ಥಿತಿಗತಿ ಮುಂದೆ ನಾವು ಗೆಲ್ಲಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದು ಗೆಲ್ಲುವ ಅವಕಾಶ ಇರುವುದರಿಂದ ಎಚ್ಚರ ತಪ್ಪದೆ ಕೆಲಸ ಮಾಡಬೇಕೆಂದು ಸಲಹೆ ನೀಡಿದ್ದಾರೆ ಎಂದು ಹೇಳಿದರು.
ಪಕ್ಷದಲ್ಲಿ ಎಲ್ಲರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದೀರಿ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ಮಾಹಿತಿ ನಮಗೆ ಇದೆ. ರಾಜ್ಯದ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ. ಬಿಜೆಪಿ ನಮ್ಮಲ್ಲೇ ಭಿನ್ನ ಅಭಿಪ್ರಾಯ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ತಿಳಿಸಿದರು.
ರಾಜ್ಯ ಮತ್ತು ಸಂವಿಧಾನವನ್ನು ಉಳಿಸುವುದಕ್ಕಾಗಿ ಕಾಂಗ್ರೆಸ್ ಅಧಿಕಾಋಕ್ಕೆ ಬರಬೇಕು. ಬಿಜೆಪಿಗೆ ರಾಷ್ಟ್ರದ ಬಗ್ಗೆ ಪ್ರೀತಿ, ಗೌರವ ಇಲ್ಲ. ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದರೂ ಅವರನ್ನು ಸಂಪುಟದಿಂದ ವಜಾ ಮಾಡಿಲ್ಲ. ಬಿಜೆಪಿ ರಾಜ್ಯಧ್ಯಕ್ಷ ಸಚಿವರ ಹೇಳಿಕೆಯನ್ನು ಸಮರ್ಥಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಮೇಲ್ನೋಟಕ್ಕೆ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವುದು ಗೊತ್ತಾಗುತ್ತಿದೆ. ಈ ಕೆಲಸವನ್ನು ಯಾರೇ ಮಾಡಿದರು ಅದು ಅಪರಾಧ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದರೆ ಮೂರು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಅಥವಾ ಎರಡು ಶಿಕ್ಷೆಯನ್ನು ವಿಧಿಸಬಹುದು ಎಂಬ ಕಾನೂನಿದೆ ಎಂದರು.