ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ತೋರಿರುವುದರಿಂದ ರಾಜ್ಯಸಭೆಯಲ್ಲಿ ಪಕ್ಷ ಪ್ರತಿಪಕ್ಷ ನಾಯಕ ಸ್ಥಾನಮಾನವನ್ನು ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಸಂಖ್ಯೆ ಕಡಿಮೆ ಇದೆ. ಈಗ ನಡೆದಿರುವ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶ ಸೇರಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಹೆಚ್ಚು ಶಾಸಕರನ್ನು ಹೊಂದಿದೆ. ಆದ್ದರಿಂದ ಪ್ರತಿಪಕ್ಷ ನಾಯಕನ ಸ್ಥಾನವನ್ನು ಕಾಂಗ್ರೆಸ್ ಕಳೆದುಕೊಳ್ಳುವ ಸಾಧ್ಯತೆ ಇದೆ.
ಈ ವರ್ಷಾಂತ್ಯದಲ್ಲಿ ನಡೆಯಲಿರುವ ಗುಜರಾತ್ ಚುನಾವಣೆಯಲ್ಲಿ ಮತ್ತು ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವು ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗದಿದ್ದರೆ ಕಾಂಗ್ರೆಸ್ ಸೀಟುಗಳ ಸ್ಥಾನ ಕಡಿಮೆಯಾಗಲಿದೆ. ಹಾಗಾಗಿ ಆ ಸ್ಥಾನಮಾನವನ್ನು ಕಳೆದುಕೊಳ್ಳಬಹುದು ಎಂದು ಡೆಕನ್ ಕ್ರಾನಿಕಲ್ ವರದಿ ಮಾಡಿದೆ.
ಮೇಲ್ಮನೆಯಲ್ಲಿ ಪ್ರಸ್ತುತ ಕಾಂಗ್ರೆಸ್ 34 ಸದಸ್ಯರನ್ನು ಹೊಂದಿದೆ. ಈ ವರ್ಷ ಕನಿಷ್ಠ ಏಳು ಸ್ಥಾನಗಳನ್ನು ಕಳೆದುಕೊಳ್ಳುವ ಹಾದಿಯಲ್ಲಿದೆ. ನಿಯಮಗಳ ಪ್ರಕಾರ ಒಂದು ಪಕ್ಷವು ಸದನದ ಒಟ್ಟು ಸದಸ್ಯತ್ವದ ಕನಿಷ್ಠ ಶೇ.10ರಷ್ಟು ಬಲವನ್ನು ಹೊಂದಿರಬೇಕು. ಆಗ ಮಾತ್ರ ಪ್ರತಿಪಕ್ಷ ನಾಯಕನ ಸ್ಥಾನವನ್ನು ಪಡೆಯಬಹುದಾಗಿದೆ.
ಪ್ರತಿಪಕ್ಷ ನಾಯಕನ ಸ್ಥಾನವನ್ನು ಉಳಿಸಿಕೊಳ್ಳಲು ಸದನದಲ್ಲಿ ಪಕ್ಷವು ತನ್ನ ನಾಯಕನಿಗೆ ಕನಿಷ್ಠ 25 ಸದಸ್ಯರನ್ನು ಹೊಂದಿರಬೇಕು ಎಂದು ರಾಜ್ಯಸಭಾ ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿ ಡೆಕನ್ ಕ್ರಾನಿಕಲ್ ವರದಿ ಮಾಡಿದೆ. ಈಗ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನ ವಿರೋಧ ಪಕ್ಷದ ನಾಯಕರಾಗಿದ್ದಾರೆ.
ಪಂಜಾಬ್ ನಿಂದ ಐದು ಮತ್ತು ಹಿಮಾಚಲ ಪ್ರದೇಶ, ಅಸ್ಸಾಂ, ಕೇರಳ, ನಾಗಾಲ್ಯಾಂಡ್ ಮತ್ತು ತ್ರಿಪುರದಿಂದ ಎಂಟು ಇದ್ದರೆ, ರಾಜ್ಯಸಭೆಯಲ್ಲಿ ಖಾಲಿ ಇರುವ 13 ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣಾ ಆಯೋಗವು ಮಾರ್ಚ್ 31ಕ್ಕೆ ಚುನಾವಣೆಯನ್ನು ಈ ತಿಂಗಳ ಆರಂಭದಲ್ಲಿ ಘೋಷಿಸಿತ್ತು.
ಪಂಜಾಬ್ ನಿಂದ ಮುಂದಿನ ತಿಂಗಳು ನಿವೃತ್ತರಾಗಲಿರುವ ಸದಸ್ಯರಲ್ಲಿ ಕಾಂಗ್ರೆಸ್ ನ ಇಬ್ಬರು ಸೇರಿದ್ದಾರೆ. ಈ ಬಾರಿ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷವು ಬಹುಮತ ಪಡೆದು ತನ್ನ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಈ ವರ್ಷ ಚುನಾವಣೆಯ ನಡೆಯಲಿರುವ ರಾಜ್ಯದ ಏಳು ಸ್ಥಾನಗಳ್ಲಿ ಕನಿಷ್ಠ ಆರನ್ನಾದರೂ ಗೆಲ್ಲುವ ಸ್ಥಿತಿಯಲ್ಲಿದೆ.
ಮೇಲ್ಮನೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಈ ವರ್ಷ ಅಸ್ಸಾಂ, ಕೇರಳ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲೂ ಕಾಂಗ್ರೆಸ್ ಸಂಖ್ಯೆ ಇಳಿಮುಖವಾಗಲಿದೆ. ಇದು ಕಾಂಗ್ರೆಸ್ ಮೇಲೆ ಪರಿಣಾಮ ಬೀರಲಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.


