ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದ್ದು ರಾಜಕಾರಣಿಗಳು ಈ ಆದೇಶವನ್ನು ರಾಜಕಾರಣಿಗಳು ಅನುಸರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪ್ರತಿಯೊಬ್ಬರೂ ತೀರ್ಪಿಗೆ ಬದ್ಧರಾಗಿದ್ದು, ಅದನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರ್ಕಾರಕ್ಕೆ ಸಹಕರಿಸಬೇಕು. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಬೊಮ್ಮಾಯಿ ಮನವಿ ಮಾಡಿದರು.
ಎಲ್ಲ ವಿದ್ಯಾರ್ಥಿಗಳು ಉಚ್ಚ ನ್ಯಾಯಾಲಯದ ಆದೇಶವನ್ನು ಅನುಸರಿಸಬೇಕು. ತರಗತಿಗಳು ಮತ್ತು ಪರೀಕ್ಷೆಗಳನ್ನು ಬಹಿಷ್ಕರಿಸಬಾರದು. ನಾವು ನ್ಯಾಯಾಲಯದ ಆದೇಶಗಳಿಗೆ ಬದ್ಧರಾಗಿರಬೇಕು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಾತನಾಡಿ, ಮುಸ್ಲಿಂ ಹೆಣ್ಣುಮಕ್ಕಳ ಹೃದಯ ಗೆಲ್ಲಲು ಪ್ರಯತ್ನಿಸುತ್ತೇವೆ. ಅವರನ್ನು ಶಿಕ್ಷಣದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.
ಕರ್ನಾಟಕದ ಜನರು ನ್ಯಾಯಾಲಯದ ತೀರ್ಪಿನ ವಿರುದ್ಧ ಮಾತನಾಡುವುದಿಲ್ಲ. ಹುಡುಗಿಯರು ಕಾಲೇಜಿಗೆ ಬಂದು ತಮ್ಮ ಶಿಕ್ಷಣ ಮುಂದುವರಿಸುತ್ತಾರೆ ಎಂಬ ನಂಬಿಕೆ ನನಗಿದೆ. ಈ ಹುಡುಗಿಯರು ದಾರಿ ತಪ್ಪಿದ್ದಾರೆ ಎಂದು ನಾನು ನಂಬುತ್ತೇನೆ. ಮುಂದಿನ ದಿನಗಳಲ್ಲಿ ಅವರು ಆಲ್ ರೈಟ್’ ಆಗುತ್ತಾರೆ ಎಂದರು.
ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿಯುವ ಕರ್ನಾಟಕ ಹೈಕೋರ್ಟ್ನ ನಿರ್ಧಾರವು ತೀವ್ರ ನಿರಾಶಾದಾಯಕವಾಗಿದೆ. ಒಂದು ಕಡೆ ನಾವು ಮಹಿಳೆಯರ ಸಬಲೀಕರಣದ ಬಗ್ಗೆ ಮಾತನಾಡುತ್ತೇವೆ. ಆದರೆ ನಾವು ಅವರಿಗೆ ಸರಳ ಆಯ್ಕೆಯ ಹಕ್ಕನ್ನು ನಿರಾಕರಿಸುತ್ತಿದ್ದೇವೆ. ಇದು ಕೇವಲ ಧರ್ಮದ ಬಗ್ಗೆ ಅಲ್ಲ ಎಂದು ಟ್ವೀಟ್ ಮಾಡಿದ್ದಾರೆ.