ಪಾವಗಡದಲ್ಲಿ ಶನಿವಾರ ಸಂಭವಿಸಿದ ಬಸ್ ದುರಂತ ಬಹಳ ದುರದೃಷ್ಟಕರ. ಇಂತಹ ಘಟನೆ ನಡೆಯಬಾರದಿತ್ತು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತೀವ್ರ ಕಳವಳ ವ್ಯಕ್ತಪಡಿಸಿದರು.
ತುಮಕೂರಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವರು ಪಾಗವಡ ಬಸ್ ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಪಘಾತಕ್ಕೀಡಾಗಿರುವ ಬಸ್ ನಲ್ಲಿ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಕರೆದೊಯ್ದಿರುವುದು ದುರಂತಕ್ಕೆ ಕಾರಣವಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಮಾಹಿತಿ ತಿಳಿದುಬಂದಿದೆ. ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆಯುತ್ತೇನೆ ಎಂದರು.
ಜಿಲ್ಲಾಸ್ಪತ್ರೆಯಲ್ಲಿ 18 ಮಂದಿ ಚಿಕಿತ್ಸೆ ಪಡೆಯುತ್ತಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಲ್ಲಿ ದಾಖಲಾಗಿರುವ ಕೆಲವರಲ್ಲಿ ಮೂಳೆ ಮುರಿತವಾಗಿರುವುದು ಕಂಡುಬಂದಿದ್ದು ಆರೋಗ್ಯ ಸಿಬ್ಬಂದಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಹೇಳಿದರು.
ತುರ್ತು ಸಂದರ್ಭದಲ್ಲಿ ಆರೋಗ್ಯ ಸಿಬ್ಬಂದಿ ಮತ್ತು ಅಧಿಕಾರಿಗಳು ಶ್ರಮ ವಹಿಸಿ ಕೆಲಸ ಮಾಡಿರುವುದು ಅಭಿನಂದನೀಯ. ಬೆಂಗಳೂರಿನ ವಿಕ್ಟೋರಿಯಾ, ನಿಮ್ಹಾನ್ಸ್ ಹಾಗೂ ಸಂಜಯ್ ಗಾಂಧಿ ಆಸ್ಪತ್ರೆಯಲ್ಲೂ ಸಹ ಉತ್ತಮ ವೈದ್ಯಕೀಯ ಚಿಕಿತ್ಸೆಯನ್ನು ಪಾವಗಡ ಅಪಘಾತದಲ್ಲಿ ಗಾಯಗೊಂಡಿರುವವರನ್ನು ನೋಡಿಕೊಳ್ಳಲಾಗಿದೆ ಎಂದರು.
ವಿದ್ಯಾಭ್ಯಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಈ ರೀತಿ ಆಗಿರುವುದು ನಿಜಕ್ಕೂ ನೋವಿನ ಸಂಗತಿ. ಇಂತಹ ಘಟನೆಗಳಿಂದ ವಿದ್ಯಾಋ್ಥಿಗಳನ್ನು ಕಳೆದುಕೊಳ್ಳುವುದು ಸರ್ಕಾರ ಹಾಗೂ ಪೋಷಕರಿಗೆ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದ ತಿಳಿಸಿದರು.