ರಾಷ್ಟ್ರೀಯ ಶಿಕ್ಷಣ ನೀತಿ 2020ರಲ್ಲಿ ಕನ್ನಡ ಭಾಷೆಯೂ ಸೇರಿದಂತೆ ಪ್ರಾದೇಶಿಕ ಭಾಷೆಗಳನ್ನು ಉನ್ನತ ಶಿಕ್ಷಣದಲ್ಲಿ ಕಡ್ಡಾಯ ವಿಷಯವನ್ನಾಗಿ ಮಾಡಬೇಕೆಂಬುದನ್ನು ಕಡ್ಡಾಯಗೊಳಿಸಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ಕರ್ನಾಟಕ ಹೈಕೋರ್ಟ್ ಗೆ ತಿಳಿಸಿದೆ.
ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ ಕೇಂದ್ರ ಸರ್ಕಾರದ ಹೇಳಿಕೆಯನ್ನು ಗಮನಿಸಿ ಮೇಲಿನಂತೆ ಹೇಳಿದೆ.
ವಿದ್ಯಾರ್ಥಿಗಳಿಗೆ ಕನ್ನಡವನ್ನು ಪದವಿ ಹಂತದಲ್ಲಿ ಕಡ್ಡಾಯಗೊಳಿಸಲು ಹೊರಡಿಸಿದ ಆಗಸ್ಟ್ 7, 2021 ಮತ್ತು ಸೆಪ್ಟೆಂಬರ್ 15, 2021ರ ಸರ್ಕಾರಿ ಆದೇಶಗಳ ಕಾರ್ಯಾಚರಣೆಯನ್ನು ಮುಂದಿನ ವಿಚಾರವಣೆಯವರೆಗೆ ತಡೆಹಿಡಿಯಲಾಗುವುದು ಎಂದು ಪೀಠ ಹೇಳಿದೆ.
ರಾಷ್ಟ್ರೀಯ ಶಿಕ್ಷಣ ನೀತಿಯ ದೃಷ್ಟಿಯಿಂದ ಪ್ರಾದೇಶಿಕ ಭಾಷೆಯನ್ನು ಕಡ್ಡಾಯಗೊಳಿಸಬಹುದೇ ಅಥವಾ ಬೇಡವೇ ಎಂಬ ಬಗ್ಗೆ ಮಾತ್ರ ನಾವು ಚಿಂತಿಸುತ್ತೇವೆ. ಅದು ನಮ್ಮ ಮುಂದಿರುವ ಏಕೈಕ ಕಾನೂನು ಸಮಸ್ಯೆಯಾಗಿದೆ ಎಂಬ ನ್ಯಾಯಮೂರ್ತಿಗಳ ಹೇಳಿಕೆಯನ್ನು ಉಲ್ಲೇಖಿಸಿ ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.
ಮುಂದಿನ ವಿಚಾರಣೆ ಜುಲೈ ಕೊನೆಯ ವಾರದಲ್ಲಿ ನಡೆಯಲಿದೆ.
ಪದವಿ ಹಂತದಲ್ಲಿ ವಿದ್ಯಾರ್ಥಿಗಳು ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸಿದ ಎರಡು ಸರ್ಕಾರದ ಆದೇಶಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.
ಉನ್ನತ ಶಿಕ್ಷಣಕ್ಕಾಗಿ ಪಠ್ಯಕ್ರಮದ ಭಾಗವಾಗಿ ಯಾವುದೇ ನಿರ್ದಿಷ್ಟ ಭಾಷೆಯನ್ನು ಆಯ್ಕೆ ಮಾಡಲು ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಯ ಮೇಲೆ ಯಾವುದೇ ನಿರ್ಬಂಧವನ್ನು ವಿಧಿಸುವುದಿಲ್ಲ ಎಂಬ ಘೋಷಣೆಯನ್ನು ಮನವಿಯಲ್ಲಿ ಕೋರಲಾಗಿದೆ.
ಹಿಂದಿನ ವಿಚಾರಣೆಯಲ್ಲಿ ಉನ್ನತ ಶಿಕ್ಷಣದಲ್ಲಿ ಕನ್ನಡವನ್ನು ಒಂದು ವಿಷಯವನ್ನಾಗಿ ಕಡ್ಡಾಯಗೊಳಿಸುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ನ್ಯಾಯಾಲಯವು ಗಮನಿಸಿತ್ತು ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.