ಕರ್ನಾಟಕದ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬಿಜೆಪಿ ಸರ್ಕಾರದ ಎಲ್ಲಾ ವಿಭಾಗಗಳಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬರುತ್ತಿದ್ದು ಸಂತೋಷ್ ಪಾಟೀಲ್ ಅವರ ಆರೋಪವೇ ಇದಕ್ಕೆ ಸಾಕ್ಷಿ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಆರೋಪ ಮಾಡಿದ್ದಾರೆ.
ಬಿಜೆಪಿ ಸರ್ಕಾರ ರಾಜ್ಯವನ್ನು ಲೂಟಿ ಮಾಡುತ್ತಿದೆ. ತನ್ನ ಕಾರ್ಯಕರ್ತರನ್ನು ಬಿಡದಿರುವಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ. ಅಧಿಕೃತ ಪತ್ರದ ಮೂಲಕ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಬಳಿ 40ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂದು ಸಂತೋಷ್ ಪಾಟೀಲ್ ಆರೋಪಿಸಿರುವುದೇ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ಸರ್ಕಾರದ ವಿರುದ್ಧ ಕಮಿಷನ್ ಆರೋಪ ಕೇಳಿ ಬಂದರೂ ಬೊಮ್ಮಾಯಿ ಮೌನಕ್ಕೆ ಶರಣಾದರು. ಅಮಿತ್ ಶಾ ಕ್ರಮ ಕೈಗೊಳ್ಳಲು ನಿರಾಕರಿಸಿದರು. ಪ್ರಧಾನಿ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಹೀಗಾಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿದ್ದು ತನ್ನ ಸಾವಿಗೆ ಸಚಿವರೇ ಕಾಋಣ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಇದೊಂದು ಭ್ರಷ್ಟಾಚಾರ, ಕೊಲೆ ಪ್ರಕರಣವಾಗಿದೆ ಎಂದು ತಿಳಿಸಿದರು.
ಈ ಸಂಬಂಧ ಸಚಿವರ ವಿರುದ್ದ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆ ಪ್ರಕರಣ, ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು. ಸಚಿವರನ್ನು ವಜಾಗೊಳಿಸಿ ಬಂಧಿಸಬೇಕು. ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳದಿದ್ದರೆ ಅವರೂ ಸಹ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬುದು ಸಾಬೀತಾಗುತ್ತದೆ. ಪ್ರಧಾನಿ ನಾನೂ ತಿನ್ನುವುದಿಲ್ಲ. ತಿನ್ನಲೂ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಸಂತೋಷ್ ಪಾಟೀಲ್ ಬಿಜೆಪಿ ಕಾರ್ಯಕರ್ತ. ಇವರು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪನವರ ಬಳಿ ರಸ್ತೆ ಕೆಲಸ ಪಡೆದಿದ್ದು ಕಮಿಷನ್ ಕೂಡ ನೀಡಿರುತ್ತಾರೆ. ಈಶ್ವರಪ್ಪನವರು ಹೆಚ್ಚು ಕಮಿಷನ್ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪ ಮಾಡಿದ್ದರು. ಈಗ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದು ವಾಟ್ಸಪ್ ಸಂದೇಶದಲ್ಲಿ ತಮ್ಮ ಸಾವಿಗೆ ಸಚಿವ ಈಶ್ವರಪ್ಪನವರೇ ನೇರ ಹೊಣೆ ಎಂದು ಹೇಳಿದ್ದಾರೆ ಎಂದರು.
ಕೊಲೆ ಆರೋಪ ಹೊತ್ತಿರುವ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು. ಇದೊಂದು ದೊಡ್ಡ ಅಪರಾಧ. ಇದಕ್ಕೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡಣೆ ಶಿಕ್ಷೆ ನೀಡುವಂತಹ ಅಪರಾಧವಾಗಿದೆ ಎಂದು ತಿಳಿಸಿದರು.


