ಕೊರೊನ ನಾಲ್ಕನೇ ಅಲೆಯು ಮುಂದಿನ ನಾಲ್ಕು ವಾರಗಳಲ್ಲಿ ವ್ಯಾಪಕವಾಗಿ ಹರಡುವುದರಿಂದ ಸಾರ್ವಜನಿಕರು ಮಾಸ್ಕ್ ಧರಿಸುವುದು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಟಾಸ್ಕ್ ಪೋರ್ಸ್ ಸದಸ್ಯ ಡಾ. ಮಂಜುನಾಥ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನ ಪಾಸಿಟಿವಿಟಿ ದರ 2ರ ಆಸುಪಾಸಿನಲ್ಲಿದೆ. ಹಾಗಾಗಿ ಜನರು ಕೊವಿಡ್-19 ನಿಯಮಗಳನ್ನು ಅನುಸರಿಸಬೇಕು ಎಂದು ತಿಳಿಸಿದ್ದಾರೆ.
ನಾಲ್ಕನೇ ಅಲೆಯ ತೀವ್ರತೆ ಕಡಿಮೆ ಇದ್ದರೂ, ಜನರು ಮುನ್ನೆಚ್ಚರಿಕೆ ವಹಿಸಬೇಕು. ಸಾರ್ವಜನಿಕ ಸ್ಥಳದಲ್ಲಿ, ಜನರು ಸೇರುವ ಮಾರುಕಟ್ಟೆ ಪ್ರದೇಶದಲ್ಲಿ ಜನರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜೂನ್ ಮತ್ತು ಜುಲೈ ತಿಂಗಳಲ್ಲಿ ನಾಲ್ಕನೇ ಅಲೆಯ ತೀವ್ರತೆ ಹೆಚ್ಚಾಗಲಿದೆ ಎಂದು ವಿವರಿಸಿದ್ದಾರೆ.
ಕೊರೊನ ನಾಲ್ಕನೇ ಅಲೆಯ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಪ್ರಯಾಣಿಕರು ಮತ್ತು ಪ್ರವಾಸಿಗರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಲಾಗುವುದು. ಜೊತೆಗೆ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಿ ವಿದೇಶದಿಂದ ಬಂದಿರುವವರ ಮೇಲೆ ತೀವ್ರ ನಿಗಾವಹಿಸಲಾಗುವುದು. ಕೊರೊನ ನಾಲ್ಕನೇ ಅಲೆ ಹರಡದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.